ಕೇಂದ್ರ ರೈಲ್ವೆ ಸಚಿವರೊಂದಿಗೆ ಎಚ್‌ಡಿಕೆ ಮಹತ್ವದ ಚರ್ಚೆ
ನವದೆಹಲಿ,ಜೂ.19-ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿಯಾದ ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ರಾಜ್ಯದ ರೈಲ್ವೆ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಚರ್ಚೆ ನಡೆಸಿದರು.
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣ ಗೊಳಿಸುವುದು, ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಕುರಿತಂತೆ ರೈಲ್ವೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.
ರೈಲ್ವೆ ಸಚಿವರು ರಾಜ್ಯದ ಯೋಜನೆಗಳ ಬಗ್ಗೆ ಅತ್ಯಂತ ಸಕಾರಾತಕವಾಗಿ ಸ್ಪಂದಿಸಿದ್ದು, ನನಗೆ ಬಹಳ ಸಂತೋಷ ಉಂಟು ಮಾಡಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಮಾಜಿ ಪ್ರಧಾನಿಗಳಾದ ಹೆಚ್‌‍.ಡಿ.ದೇವೆಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ – ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವ ಕುರಿತಂತೆ ಚರ್ಚೆ ನಡೆಸಲಾಗಿದೆ.