8 ತಿಂಗಳಿನಿಂದ ರೈತರಿಗೆ ಹಾಲಿನ ಪ್ರೋತ್ಸಾಹಧನ ನೀಡದ ಕಾಂಗ್ರೆಸ್‌‍ ಸರ್ಕಾರ : ಆರ್‌‍.ಅಶೋಕ್‌‍ ಕಿಡಿ
ಬೆಂಗಳೂರು,ಮೇ22-ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಗೆ ಹಾಲು ಸರಬರಾಜು ಮಾಡುವ 26 ಲಕ್ಷಕ್ಕೂ ಹೆಚ್ಚು ರೈತರಿಗೆ ನೀಡಬೇಕಾದ 703 ಕೋಟಿ ರೂ. ಪ್ರೋತ್ಸಾಹಧನವನ್ನು ಕಳೆದ 8 ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ ಈ ರೈತ ವಿರೋಧಿ ಕಾಂಗ್ರೆಸ್‌‍ ಸರ್ಕಾರ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌‍.ಅಶೋಕ್‌‍ ಕಿಡಿಕಾರಿದ್ದಾರೆ.
ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌‍ ಮಾಡಿರುವ ಅವರು,  ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಚುನಾವಣೆ ಸಂದರ್ಭದಲ್ಲಿ ನಂದಿನಿ ಹೆಸರಲ್ಲಿ ರಾಜಕೀಯ ಮಾಡಿ ಈಗ ಅಮೃತದಂತಹ ಹಾಲು ಕೊಡುವ ರೈತರ ಬಾಳಲ್ಲಿ ವಿಷ ಹಿಂಡುವ ಪಾಪದ ಕೆಲಸ ಮಾಡುತ್ತಿದ್ದೀರಲ್ಲ, ಇದೇನಾ ನೀವು ನಮ ನಂದಿನಿ ಬ್ರ್ಯಾಂಡ್‌‍ ಉಳಿಸುವ ಪರಿ? ಪ್ರಶ್ನಿಸಿದ್ದಾರೆ.
ನಂದಿನಿ ಸಂಸ್ಥೆಯ ಕೋಟ್ಯಂತರ ರೂ. ಬಳಸಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್‌‍ ಪಂದ್ಯಗಳ ಪ್ರಾಯೋಜಕತ್ವ ಪಡೆಯಲು ನಿಮ್ಮ ಸರ್ಕಾರದ ಬಳಿ ಹಣ ಇದೆ. ಆದರೆ ನಂದಿನಿ ಬ್ರ್ಯಾಂಡ್‌‍ ಅನ್ನ ಕಟ್ಟಿ, ಬೆಳೆಸಿ, ಪೋಷಿಸುತ್ತಿರುವ ಹೈನುಗಾರರಿಗೆ ಸಮಯಕ್ಕೆ ಸರಿಯಾಗಿ ಪ್ರೋತ್ಸಾಹಧನ ನೀಡಲು ತಮ್ಮ ಬಳಿ ಹಣವಿಲ್ಲ ಅಲ್ಲವೇ ಸಿದ್ದರಾಮಯ್ಯನವರೇ? ನಾಡಿನ ರೈತರ ಶಾಪ ತಮಗೆ ತಟ್ಟದೇ ಇರದು ಎಂದು ಅಸಮಾಧಾನ ವ್‌ಯಕ್ತಪಡಿಸಿದ್ದಾರೆ.
ಮತ್ತೊಂದುಟ ಟ್ವೀಟ್‌‍ನಲ್ಲಿ, ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಲು ಮತ್ತೊಮೆ ವಿಫಲವಾಗಿರುವ ಸರ್ಕಾರ, ಬರಗಾಲದ ನಡುವೆಯೂ ಮೇ ತಿಂಗಳಿನಲ್ಲಿ ಮತ್ತೊಮೆ ತಮಿಳುನಾಡಿಗೆ 2.5 ಟಿಸಿಂಸಿ ನೀರು ಬಿಡಲು ಶರಣಾಗಿದೆ ಎಂದು ಎಂದು ಬೇಸರ ವ್‌ಯಕ್ತಪಡಿಸಿದ್ದಾರೆ.
ರಾಜ್ಯದ ಪರವಾಗಿ ಸಮರ್ಥವಾದ ವಾದ ಮಂಡಿಸಲು ಸಿದ್ಧರಾಗಿ ಎಂದು ಎಷ್ಟು ಬಾರಿ ಎಚ್ಚರಿಸಿದರೂ ನಿರ್ಲಕ್ಷ್ಯ ಮಾಡುತ್ತಾ ಕಾಲಹರಣ ಮಾಡಿದ ಸಿಎಂ ಹಾಗು ಡಿಸಿಎಂ ಅವರು ಈಗ ಮತ್ತೊಮೆ ಕಾವೇರಿಯ ಮಡಿಲನ್ನು ಬರಿದು ಮಾಡಿ ಕನ್ನಡಿಗರಿಗೆ ದ್ರೋಹ ಬಗೆದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.