ಡಿಕೆಶಿ ವಿರುದ್ಧ ಶಾಸಕ ಯತ್ನಾಳ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ
 
ಬೆಂಗಳೂರು,ಸೆ.17– ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಪ್ರತಿವಾದಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿ ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೈಗೆತ್ತಿ ಕೊಂಡ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಗಳಾದ ಸೂರ್ಯಕಾಂತ್ ಹಾಗೂ ಉಜ್ಜಲ್ ಬುಯಾನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಲೋಕಾಯುಕ್ತ, ಸಿಬಿಐ, ರಾಜ್ಯ ಸರ್ಕಾರ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ತಕರಾರು ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿತು.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಪ್ರಕರಣ ಸಂಬಂಧ ಸಚಿವ ಸಂಪುಟದಲ್ಲಿ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಸಿಬಿಐ ತನಿಖೆಯನ್ನು ಹಿಂಪಡೆಯಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿಸದಸ್ಯ ಪೀಠ ಇದನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸುವಂತೆ ಸೂಚಿಸಿ ಯತ್ನಾಳ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಇದರಂತೆ ಯತ್ನಾಳ್ ಸುಪ್ರೀಂಕೋರ್ಟ್ಗೆ ಮೇಲನವಿ ಸಲ್ಲಿಸಿದ್ದರು.
ಬಸನಗೌಡ ಯತ್ನಾಳ್ ಅರ್ಜಿ ಸಲ್ಲಿಕೆಗೆ ಮುನ್ನವೇ ಡಿ.ಕೆ ಶಿವಕುಮಾರ್ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇವಿಯಟ್ ಸಲ್ಲಿಸಿದ್ದು, ಪ್ರಕರಣದಲ್ಲಿ ತಮ ಅಭಿಪ್ರಾಯ ಕೇಳದೆ ಯಾವುದೇ ಆದೇಶ ನೀಡಬಾರದು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.