ಜಾತಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಬೇಕು ಎಂಬುದು ಸಮುದಾಯದ ಅಭಿಪ್ರಾಯ: ಡಿ.ಕೆ.ಶಿವಕುಮಾರ್
ಬೆಂಗಳೂರು, ನ.22- ರಾಜ್ಯದಲ್ಲಿ ಜಾತಿವಾರು ಜನಸಂಖ್ಯೆಯ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸ ಬೇಕು ಎಂಬುದು ಎಲ್ಲಾ ಸಮುದಾಯದ ಅಭಿಪ್ರಾಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಇಂದು ಬೆಳಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ದಿಢೀರ್ ಭೇಟಿ ನೀಡಿದಅವರು, ಹಲವು ಮಹತ್ವದ ವಿಚಾರಗಳ ಕುರಿತು ಮಾತುಕತೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಏನೇ ಇದ್ದರೂ ಸಮಾಜದ ಸ್ವಾಭಿಮಾನ, ಗೌರವದ ವಿಷಯ ಬಂದಾಗ ನಾವು ಹೆಚ್ಚು ಆದ್ಯತೆ ನೀಡಬೇಕಾಗುತ್ತದೆ ಎಂದರು.  ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಅದಕ್ಕೆ ನಾವು ಬದ್ಧರಾಗಿದ್ದೇವೆ. ಆದರೆ, ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ ಎಂದು ಹೇಳಿದರು.
ಜಾತಿ ಗಣತಿ ವರದಿಯನ್ನು ತಿರಸ್ಕರಿಸಬೇಕು ಎಂಬ ಪತ್ರಕ್ಕೆ ನೀವು ಸಹಿ ಹಾಕಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು ಎಂಬುದು ಅನೇಕ ಸಮುದಾಯಗಳ ಆಗ್ರಹವಾಗಿದೆ. ಪರಿಶಿಷ್ಟರಲ್ಲಿ ಎಡಗೈ ಸಮುದಾಯ, ಪಂಚಮಸಾಲಿಗಳು, ವೀರಶೈವರು, ಲಿಂಗಾಯಿತರು, ಒಕ್ಕಲಿಗರು ಸೇರಿದಂತೆ ಹಲವು ಸಮುದಾಯಗಳು ಹೋರಾಟ ಮಾಡುತ್ತಿವೆ. ಇದರಲ್ಲಿ ಪಕ್ಷಭೇದವಿಲ್ಲದೆ ಭಾಗವಹಿಸಲಾಗುತ್ತಿದೆ ಎಂದರು.
ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿವೆ ಎಂದು ಅವರು ಪುನರುಚ್ಚರಿಸಿದರು.ಜಾತಿ ಜನಗಣತಿ ವರದಿ ಕುರಿತಂತೆ ಮುಖ್ಯಮಂತ್ರಿಗಳಿಗೆ ನೀಡಿರುವ ಪತ್ರಕ್ಕೆ ನಾನು ಸಹಿ ಮಾಡಬಾರದೇ ಎಂದು ನಾನು ಮರುಪ್ರಶ್ನಿಸಿದ ಅವರು, ಎಷ್ಟು ಜನ ಮಂತ್ರಿಗಳು ಈ ವಿಚಾರವಾಗಿ ಸಭೆ ಮಾಡಿಲ್ಲ? ಅದೇ ರೀತಿ ನಾನು ರಾಜಕೀಯ ಪಕ್ಕಕ್ಕಿಟ್ಟು ನಮ್ಮ ಸಮಾಜ, ಅದರ ಗೌರವ, ಅಭಿಮಾನ ಉಳಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದೇನೆ. ಇದು ಎಲ್ಲಾ ನಾಯಕರಲ್ಲೂ ಇರುತ್ತದೆ ಎಂದರು.
 : ಡಿಸೆಂಬರ್ 23ರಂದು 545 ಪಿಎಸ್‍ಐ ಹುದ್ದೆಗಳಿಗೆ ಮರು ಪರೀಕ್ಷೆ
ನಿಗಮ ಮಂಡಳಿ ನೇಮಕ ವಿಚಾರವಾಗಿ ಚರ್ಚೆ ಮಾಡುತ್ತಿದ್ದೇವೆ. ಹಿರಿಯ ನಾಯಕರು, ಶಾಸಕರ ಅಭಿಪ್ರಾಯವನ್ನು ಪಡೆಯುತ್ತಿದ್ದೇವೆ. ನಾನು ಹಾಗೂ ಮುಖ್ಯಮಂತ್ರಿಗಳು ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಹೋಗಬೇಕಿದೆ. ನ.28ರಂದು ನಮ್ಮ ದೆಹಲಿ ನಾಯಕರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಆ ಸಭೆ ಬಳಿಕ ನಮ್ಮ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ಕಳುಹಿಸುತ್ತೇವೆ ಎಂದು ಹೇಳಿದರು.
ಗೃಹಸಚಿವರು ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಸಮಾಧಾನ ಹೊಂದಿದ್ದಾರೆಯೇ ಎಂದು ಕೇಳಿದಾಗ, ಗೃಹಮಂತ್ರಿಗಳು ಮೂರು ದಿನಗಳ ಕಾಲ ಪ್ರವಾಸದಲ್ಲಿದ್ದರು, ಅವರಿಗೆ ಅವರದೇ ಆದ ಕೆಲಸಗಳಿರುತ್ತವೆ. ಸುಮ್ಮನೆ ಯಾರೋ ಹೇಳಿದ್ದನ್ನು ಮಾಧ್ಯಮಗಳು ದೊಡ್ಡದಾಗಿ ಬಿಂಬಿಸುತ್ತಿವೆ. ಅವರು ಯಾವ ಕಾರಣಕ್ಕೆ ಅಸಮಾಧಾನಗೊಳ್ಳುತ್ತಾರೆ? ಅಸಮಾಧಾನ ಆಗುವಂತಹದ್ದು ಏನಾಗಿದೆ? ಈ ರೀತಿ ಅಸಮಾಧಾನ ಸೃಷ್ಟಿಸಿ ಎಂದು ವದಂತಿ ಹಬ್ಬಿಸಿ ನಿಮ್ಮ ಘನತೆ ಏಕೆ ಹಾಳುಮಾಡಿಕೊಳ್ಳುತ್ತೀರಿ ಎಂದು ಪ್ರತಿಕ್ರಿಯಿಸಿದರು.
ಕಾಂಗ್ರೆಸ್‍ನಲ್ಲಿ ಎಲ್ಲರೂ ಒಂದೇ. ಇಲ್ಲಿ ನನ್ನ ಅಥವಾ ಮುಖ್ಯಮಂತ್ರಿಯವರ ಬೆಂಬಲಿಗರು ಎಂಬುದಿಲ್ಲ. ಗೃಹ ಸಚಿವರ ಬೆಂಬಲಿಗರೂ ಎಂಬುದೂ ಸರಿಯಲ್ಲ. ಎಲ್ಲರೂ ಕಾಂಗ್ರೆಸಿಗರು. ಮಂತ್ರಿಗಿರಿ ಸಿಗದ ಹಿರಿಯ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ವಿಚಾರಣೆಗೆ ಕರೆ ತಂದಿದ್ದ ವ್ಯಕ್ತಿ ಆತ್ಮಹತ್ಯೆ: ಪೊಲೀಸ್ ಸಿಬ್ಬಂದಿಗಳ ಅಮಾನತ್ತು
ನಿಗಮ ಮಂಡಳಿ ನೇಮಕ ವಿಳಂಬ ಮಾಡುತ್ತಿರುವುದು ಕಲೆಕ್ಷನ್ ಗಾಗಿ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ನಾವು ಅಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ನಿಗಮ ಮಂಡಳಿ ನೇಮಕ ಮಾಡುತ್ತಿದ್ದೇವೆ. ಅವರು ಅಕಾರಕ್ಕೆ ಬಂದ ಎಷ್ಟು ವರ್ಷಗಳ ನಂತರ ಮಾಡಿದರು? ಅವರಿಗೆ ನಾಲ್ಕೆ ೈದು ಸಚಿವರನ್ನು ನೇಮಕ ಮಾಡಲಾಗದೆ ಮುಖ್ಯಮಂತ್ರಿಗಳೇ ಖಾತೆಯನ್ನು ಇಟ್ಟುಕೊಂಡಿದ್ದರು. ಬಿಜೆಪಿ ತಟ್ಟಿಯಲ್ಲಿ ಹೆಗ್ಗಣ ಬಿದ್ದಿದ್ದು, ಮೊದಲು ಅದನ್ನು ನೋಡಿಕೊಳ್ಳಲಿ ಎಂದು ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.