ದರ್ಶನ್‌ಗೆ ಬಿಗ್ ಶಾಕ್ ಕೊಟ್ಟ ಸರ್ಕಾರ : ಮನೆ ಉಟ ಮನವಿ ತಿರಸ್ಕರ
ಬೆಂಗಳೂರು, ಆ.20-  ಮನೆ ಊಟ ಪಡೆದುಕೊಳ್ಳಲು ಅನುಮತಿ ನೀಡುವಂತೆ ಕೋರಿ ಜೈಲಿನಲ್ಲಿರುವ ನಟ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ ಗೆ ಮಾಹಿತಿ ನೀಡಿದೆ. ಅನಾರೋಗ್ಯ ಕಾರಣ ನೀಡಿ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ಕೋರಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ಹಾಜರಿದ್ದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಪೀಠಕ್ಕೆ ಮಾಹಿತಿ ನೀಡಿ, ದರ್ಶನ್‌ ಮನವಿಯನ್ನು ಆಗಸ್ಟ್‌ 14ರಂದೇ ತಿರಸ್ಕರಿಸಲಾಗಿದೆ. ಈ ವಿಚಾರವನ್ನು ಅದೇ ದಿನ ತಿಳಿಸಲಾಗಿದೆ ಎಂದು ವಿವರಿಸಿದರು.
ಈ ವೇಳೆ ದರ್ಶನ್‌ ಪರ ವಕೀಲರು ನ್ಯಾಯಪೀಠಕ್ಕೆ ಮನವಿ ಮಾಡಿ, ಪ್ರಕರಣವನ್ನು ಮೆರಿಟ್‌ ಮೇಲೆ ವಾದಿಸಲು ಕಾಲಾವಕಾಶ ನೀಡುವಂತೆ ಕೋರಿದರು. ಮನವಿ ಪುರಸ್ಕರಿಸಿದ ಹೈಕೋರ್ಟ್, ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್‌ 5ಕ್ಕೆ ಮುಂದೂಡಿತು.