ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರಾಗಿ ಉಮಾ ಮಹದೇವನ್‌
ಬೆಂಗಳೂರು,ಜು.30-ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರು ಹಾಗೂ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಗೆ ಉಮಾ ಮಹದೇವನ್‌ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಅಭಿವೃದ್ಧಿ ಆಯುಕ್ತರ ಹುದ್ದೆಯ ಜೊತೆಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿಯನ್ನು ಉಮಾ ಮಹದೇವನ್‌ ಅವರಿಗೆ ನೀಡಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್‌ ಫರ್ವೇಜ್‌ ಅವರಿಗೆ ಅದೇ ಇಲಾಖೆಯ ಪಂಚಾಯತ್‌ರಾಜ್‌ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.ತೋಟಗಾರಿಕೆ ಇಲಾಖೆ ನಿರ್ದೇಶಕರಾದ ರಮೇಶ್‌.ಡಿ.ಎಸ್‌‍ ಅವರಿಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಹುದ್ದೆಯ ಹೊಣೆಗಾರಿಕೆ ವಹಿಸಿ ಸರ್ಕಾರ ಆದೇಶ ವಹಿಸಿದೆ.
ಪಂಚಾಯತ್‌ರಾಜ್‌ ಇಲಾಖೆಯ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ್‌ ಅವರಿಗೆ ಮೈಸೂರಿನಲ್ಲಿರುವ ಅಬ್ದುಲ್‌ ನಜೀರ್‌ ಸಾಬ್‌, ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌ ಸಂಸ್ಥೆಯ ನಿರ್ದೇಶಕ ಹುದ್ದೆಯ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.
ನಜೀರ್‌ಸಾಬ್‌ ಸಂಸ್ಥೆಯ ಹೊಣೆಗಾರಿಕೆಯಿಂದ ಶಿಲ್ಪಾ ನಾಗ್‌ ಅವರನ್ನು ಬಿಡುಗಡೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.