ಅತಿಥಿ ಗೃಹಕ್ಕೆ ಬೀಗ : ವಿಶ್ರಾಂತಿಗೆ ಬಂದಿದ್ದ ಕೇಂದ್ರ ಸಚಿವ ಕುಮಾರಸ್ವಾಮಿಗೆ ಬೇಸರ
ನಂಜನಗೂಡು, ಜು.28-ಬೆಳಗ್ಗೆ ಇಲ್ಲಿನ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದು ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಶಾಕ್‌ ಕಾದಿತ್ತು. ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಲ್ಪ ವಿಶ್ರಾಂತಿ ಪಡೆಯಲು ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹಕ್ಕೆ ಆಗಮಿಸಿದಾಗ ಬೀಗ ಜಡಿಯಲಾಗಿತ್ತು.
ಈ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿಗಳನ್ನು ಕೇಳಿದಾಗ ಅಧಿಕಾರಿಗಳು ಬೀಗ ಹಾಕಿಕೊಂಡು ಹೋಗಿದ್ದಾರೆ ಎಂದು ಹೇಳಿದ್ದಾರೆ. ಸುಮಾರು 15 ನಿಮಿಷ ಅಲ್ಲಿ ಕಾದರೂ ಯಾರೂ ಬರದಿದ್ದಾಗ ಎಚ್‌ಡಿಕೆ ಬೇಸರಿದಂದಲೇ ಮೈಸೂರಿಗೆ ತೆರಳಿದರು.
ಈ ಸಂದರ್ಭದಲ್ಲಿ ಜತೆಯಲ್ಲಿದ್ದ ಮಾಜಿ ಶಾಸಕ ಸಾ.ರಾ.ಮಹೇಶ್‌ ಸೇರಿದಂತೆ ಇತರ ಜೆಡಿಎಸ್‌‍ ನಾಯಕರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ ವ್ಯಕ್ತಪಡಿಸಿದರು.ಮೊದಲೇ ಕೇಂದ್ರ ಸಚಿವರು ಬರುವ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಆದರೆ, ಸರ್ಕಾರದ ನಿರ್ದೇಶನದಂತೆ ಇಲ್ಲಿನ ಅಧಿಕಾರಿಗಳು ವರ್ತಿಸಿದ್ದಾರೆ. ಇದು ಎಂತಹ ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದಾರೆ.