ಹಾಸನ ಜಿಲ್ಲೆಯಲ್ಲಿ ಡೆಂಘೀಗೆ ಬಾಲಕಿ ಬಲಿ
ಹಾಸನ,ಜು.4-ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಡೆಂಘೀ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಮಹಾಮಾರಿಗೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಗುಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲಾಶ್ರೀ ಜಿ.ಎಲ್‌. (11) ಮೃತಪಟ್ಟ ಬಾಲಕಿ.
ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು ಹೊಳೆನರಸೀಪುರ ಪಟ್ಟಣದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಿಮ್ಸೌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಬಾಲಕಿ ಮೃಪಟ್ಟಿದ್ದಾಳೆ.ಡೆಂಘೀಯಿಂದ ಇದುವರೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಜೂ.28 ರಂದು ಹೊಳೆನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಗ್ರಾಮದಲ್ಲಿ ವರ್ಷಿಕ (8) ಅತಿಯಾದ ಜ್ವರದಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದು, ಇದು ಡೆಂಘೀ ಮಹಾಮಾರಿಗೆ ಎರಡನೇ ಬಲಿಯಾಗಿದ್ದು, ತಾಲ್ಲೂಕಿನಾದ್ಯಂತ ಆತಂಕ ಮನೆ ಮಾಡಿದೆ.
ತಾವು ವಾಸಿಸುವ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಸೊಳ್ಳೆಗಳು ಉತ್ಪತ್ತಿಯಾಗದಂತೆ ಸ್ವಚ್ಛತೆ ಕಾಪಾಡಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಮಾಡುತ್ತಿರಬೇಕು. ಮಳೆ ನೀರು, ಹಸಿಕಸಿ ಶೇಖರಣೆಯಾಗುವಂತಹ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು.
ನೀರು ಸಂಗ್ರಹ ಮಾಡುವ ತೊಟ್ಟಿಗಳನ್ನು ಎರಡು ದಿನಕ್ಕೊಮೆ ಸ್ವಚ್ಛ ಮಾಡಬೇಕು. ಸಣ್ಣ ಜ್ವರ ಬಂದರೂ ಸಹ ನಿರ್ಲಕ್ಷಿಸದೇ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಮಂಡಳಿ ಮನವಿ ಮಾಡಿದೆ.