ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ, ಮೈತ್ರಿ ನಾಯಕರ ಜತೆ ಶಕ್ತಿ ಪ್ರದರ್ಶನ
ಬೆಂಗಳೂರು,ಏ.4-ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್- ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಸಿದರು.ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಡಾ.ಕುಮಾರ್ ಅವರಿಗೆ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು.’
ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮೈಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣರಾಜ ದತ್ತ ಒಡೆಯರ್, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ನಾರಾಯಣಗೌಡ, ಸಾ.ರಾ.ಮಹೇಶ್, ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕರಾದ ಡಾ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಕುಮಾರಸ್ವಾಮಿಯವರು ತಂದೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಗೂ ತಾಯಿ ಚನ್ನಮ್ಮ ದೇವೇಗೌಡರ ಆಶೀರ್ವಾದ ಪಡೆದರು.ಮಂಡ್ಯದ ಗುತ್ತಲುವಿನ ಅರಕೇಶ್ವರ ಸ್ವಾಮಿ ದೇವಸ್ಥಾನ, ಕಾಳಿಕಾಂಬ ದೇವಾಲಯ, ಜನಾರ್ದನ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಅನಂತರ ನೀರಾವರಿ ಇಲಾಖೆ ಆವರಣದಲ್ಲಿರುವ ಜಯಚಾಮರಾಜೇಂದ್ರ ಒಡೆಯರ್, ವಿಶ್ವೇಶ್ವರಯ್ಯ, ಜಗಜೀವನ್ರಾಮ್ ಹಾಗೂ ಅಂಬೇಡ್ಕರ್ ಅವರ ಪುತ್ಥಳಿಗಳಿಗೆ ಪುಷ್ಪ ನಮನ ಸಲ್ಲಿಸಿದರು.