ಹೊತ್ತಿ ಉರಿದ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್
ಬೆಂಗಳೂರು, ಆ.6-ಮಳೆ ನಡುವೆಯೇ ಚಲಿಸುತ್ತಿದ್ದ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌‍ ಮಾರ್ಗಮಧ್ಯೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಅಮೃತಹಳ್ಳಿ ಪೊಲೀಸ್‌‍ ಠಾಣಾ ವ್ಯಾಪ್ತಿಯ ನಾಗವಾರ- ಹೆಬ್ಬಾಳ ಸರ್ವೀಸ್‌‍ ರಸ್ತೆಯಲ್ಲಿ ನಿನ್ನೆ ರಾತ್ರಿ 11.30ರ ಸುಮಾರಿನಲ್ಲಿ ಬಿಎಂಟಿಸಿ ಎಲೆಕ್ಟ್ರಿಕಲ್‌ ಬಸ್‌‍ ಹೋಗುತ್ತಿದ್ದಾಗ ಏಕಾಏಕಿ ಬಸ್‌‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ಬಸ್‌‍ನ ಚಾಲಕ ಹಾಗೂ ನಿರ್ವಾಹಕ ಎಚ್ಚೆತ್ತುಕೊಂಡು ಬಸ್‌‍ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿ ಅಗ್ನಿಶಾಮಕ ದಳಕ್ಕೆ ಹಾಗೂ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸುದ್ದಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ವಾಹನದೊಂದಿಗೆ ಬಂದು ಪೊಲೀಸರ ನೆರವಿನೊಂದಿಗೆ ಬೆಂಕಿಯನ್ನು ನಂದಿಸಿದ್ದು, ಬಸ್‌‍ ಭಾಗಶಃ ಸುಟ್ಟು ಹಾನಿಗೀಡಾಗಿದೆ. ಸ್ಥಳಕ್ಕೆ ಬಿಎಂಟಿಸಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಬಸ್‌‍ನ ಎಂಜಿನ್‌ಗೆ ಮಳೆ ನೀರು ಹೋಗಿ ಶಾರ್ಟ್‌ ಸಕ್ಯೂರ್ಟ್‌ ಉಂಟಾಗಿ ಬೆಂಕಿ ಹೊತ್ತಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.ಅಮೃತಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬಸ್‌‍ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಹೆಬ್ಬಾಳ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಸುಮಾರು 8 ಕಿಲೋಮೀಟರ್‌ನಷ್ಟು ಸಂಚಾರ ದಟ್ಟಣೆ ಉಂಟಾಗಿದ್ದರಿಂದ 2 ಗಂಟೆಗೂ ಹೆಚ್ಚು ಕಾಲ ವಾಹನ ಸವಾರರು ಪರದಾಡುವಂತಾಯಿತು.