ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್
ಬೆಂಗಳೂರು,ಸೆ.25- ಬಂದ್ ಹಿನ್ನೆಲೆಯಲ್ಲಿ ನಾಳೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬಂದ್ ಸಂದರ್ಭದಲ್ಲಿ ಯಾರಾದರೂ ಬಲವಂತವಾಗಿ ಅಂಗಡಿ-ಮುಂಗಟ್ಟು ಮುಚ್ಚಿಸಲು ಯತ್ನಿಸಿದರೆ ಮುಲಾಜಿಲ್ಲದೆ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಎಚ್ಚರಿಸಿದ್ದಾರೆ.
ಈ ಸಂಜೆಯೊಂದಿಗೆ ಮಾತನಾಡಿದ ಅವರು, ಬಂದ್ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ನಗರದ ಎಲ್ಲ ಡಿಸಿಪಿಗಳಿಗೆ ಸೂಚನೆ ನೀಡಲಾಗಿದೆ. ಎಲ್ಲಾ ಉಪ ವಲಯದ ಎಸಿಪಿಗಳು, ಠಾಣೆಗಳ ಇನ್ಸ್‍ಪೆಕ್ಟರ್‍ಗಳು ನಾಳೆ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.ಮುನ್ನೆಚ್ಚರಿಕೆ ಕ್ರಮವಾಗಿ ಕ್ಷಿಪ್ರ ಕಾರ್ಯಚರಣೆ ಪಡೆ (ಆರ್‍ಎಎಫ್) 3 ಕಂಪನಿಗಳನ್ನು ಕರೆಸಿಕೊಳ್ಳಲಾಗಿದೆ. 60 ಕೆಎಸ್‍ಆರ್‍ಪಿ ಹಾಗೂ ಸಿಎಆರ್ ತುಕಡಿಗಳನ್ನು ಬಂದೋಬಸ್ತ್‍ಗಾಗಿ ನಿಯೋಜನೆ ಮಾಡಲಾಗಿದೆ ಎಂದು ಅವರು ವಿವರಣೆ ನೀಡಿದರು.
ನಾಳೆ ಬೆಂಗಳೂರು ಬಂದ್ : ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ
ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಸಣ್ಣಪುಟ್ಟ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಬಂದ್‍ನಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು. ಸ್ವಪ್ರೇರಣೆಯಿಂದ ಬಂದ್ ಮಾಡಬೇಕು. ಒಂದು ವೇಳೆ ಯಾರಾದರೂ ಬಲವಂತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸಲು ಯತ್ನಿಸಿದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಎಚ್ಚರಿಸಿದರು.