ದಾಖಲೆಗಳಿಲ್ಲದ ಸರ್ಕಾರಿ ಬಸ್ಸಿನಲ್ಲಿ ಸಾಗಿಸುತ್ತಿದ್ದ 13 ಲಕ್ಷ ರೂ. ಮೌಲ್ಯದ ಚಿನ್ನ ವಶ
ಚಿಕ್ಕಮಗಳೂರು,ಮಾ.22-ತಾಲೂಕಿನ ಮಾಗಡಿ ಚೆಕ್ ಪೋಸ್ಟ್ ನಲ್ಲಿ ಸರ್ಕಾರಿ ಬಸ್ಸಿನಲ್ಲಿ ಸಾಗಿಸುತ್ತಿದ್ದ ದಾಖಲೆಗಳಿಲ್ಲದ 13 ಲಕ್ಷ ಮೌಲ್ಯದ 220 ಗ್ರಾಂ. ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದು, ಅಜ್ಜಂಪುರ, ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 4 ಲಕ್ಷಕ್ಕೂ ಹೆಚ್ಚು ನಗದನ್ನು ಜಪ್ತಿ ಮಾಡಿದ್ದಾರೆ.
ಮಾಗಡಿ ಚೆಕ್ ಪೋಸ್ಟ್ ನಲ್ಲಿ ನಿನ್ನೆ ಬೆಂಗಳೂರಿನಿಂದ-ಚಿಕ್ಕಮಗಳೂರಿಗೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 220 ಗ್ರಾಂ ಚಿನ್ನದ ತಾಳಿ, ನೆಕ್ಲೇಸ್, ಬ್ರಾಸ್ಲೈಟ್ , ಬಳೆ, ಸರ, ಉಂಗುರಗಳನ್ನು ಪೊಲೀಸರು ಹಾಗೂ ಚುನಾವಣಾಧಿಕಾರಿಗಳ ತಂಡ ಸೀಜ್ ಮಾಡಿದ್ದಾರೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ವ್ಯಕ್ತಿಯೊಬ್ಬರು ಈ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದು, ಆಭರಣಗಳಿಗೆ ಸಂಬಂಧಿಸಿದ ಯಾವುದೇ ದಾಖಲೆ ನೀಡದ ಹಿನ್ನೆಲೆಯಲ್ಲಿ ಆಭರಣಗಳನ್ನು ಸೀಜ್ ಮಾಡಲಾಗಿದೆ.
ಈ ಚಿನ್ನಾಭರಣಗಳ ಒಟ್ಟು ಮೌಲ್ಯ 13 ಲಕ್ಷ ಎಂದು ಎಸ್‍ಎಸ್ಟಿ ಅಕಾರಿಗಳ ತಂಡ ಅಂದಾಜಿಸಿದ್ದರೆ. ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಭರಣಗಳ ಮೂಲದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಕಸ್ಕೆಬೈಲ್ ಚೆಕ್ ಪೋಸ್ಟ್ ನಲ್ಲಿ ವಾಹನದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 3,62,750 ರೂ. ನಗದನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದರೆ, ಗುರುವಾರ ಬೆಳಿಗ್ಗೆ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 1ಲಕ್ಷ ರೂ. ನಗದು ಹಾಗೂ ಅಜ್ಜಂಪುರ ತಾಲೂಕಿನ ಗಡಿ ಅಹ್ಮದಾನಗರದ ಚೆಕ್ ಪೋಸ್ಟ್ ನಲ್ಲಿ 1.30ಲಕ್ಷ ರೂ. ನಗದನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.