ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಬದ್ಲಾಪುರ ರೈಲು ನಿಲ್ದಾಣದಲ್ಲಿ ಭುಗಿಲೆದ್ದ ಪ್ರತಿಭಟನೆ; ತನಿಖೆಗೆ ಆದೇಶ ಆಗಸ್ಟ್ 13 ರಿಂದ 16 ರ ನಡುವೆ ಘಟನೆ ನಡೆದಿದ್ದು, ದೂರು ದಾಖಲಾಗಿ 12 ಗಂಟೆಗಳಾದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಆಗಸ್ಟ್ 18 ರಂದು ವ್ಯಕ್ತಿಯೊಬ್ಬನನ್ನು ಪೋಕ್ಸೋ ಅಡಿಯಲ್ಲಿ ಬಂಧನಕ್ಕೊಳಪಡಿಸಲಾಗಿದೆ. ಮಹಾರಾಷ್ಟ್ರ: ಥಾಣೆಯ ಶಾಲೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಗೆ ಮಹಾರಾಷ್ಟ್ರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಬದ್ಲಾಪುರ ರೈಲು ನಿಲ್ದಾಣದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.ಘಟನೆ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ ಅವರು, ಘಟನೆ ಸಂಬಂಧ ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದ್ದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.ಇದು ನಿಜಕ್ಕೂ ಬೇಸರ ತರಿಸಿದೆ. ಪುಣೆ ಮತ್ತು ಮುಂಬೈನ ನಾಲ್ವರು ಐಎಎಸ್ ಅಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ಶಾಲೆಯಲ್ಲಿ ಸಿಸಿಟಿವಿ ಕಾರ್ಯನಿರ್ವಹಿಸುತ್ತಿರಲಿಲ್ಲ ಎಂಬುದು ತಿಳಿದುಬಂದಿದೆ. ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ದೂರು ಕೂಡ ನೀಡಲಾಗಿದೆ. ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ವಿದ್ಯಾರ್ಥಿಗಳು ನಮ್ಮ ಆದ್ಯತೆಯಾಗಿದ್ದು, ಈ ಪ್ರಕರಣದಲ್ಲಿ ಆರೋಪಿಗೆ ಗರಿಷ್ಠ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ.ಆಗಸ್ಟ್ 13 ರಿಂದ 16 ರ ನಡುವೆ ಘಟನೆ ನಡೆದಿದ್ದು, ದೂರು ದಾಖಲಾಗಿ 12 ಗಂಟೆಗಳಾದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಆಗಸ್ಟ್ 18 ರಂದು ವ್ಯಕ್ತಿಯೊಬ್ಬನನ್ನು ಪೋಕ್ಸೋ ಅಡಿಯಲ್ಲಿ ಬಂಧನಕ್ಕೊಳಪಡಿಸಲಾಗಿದೆ. ಘಟನೆ ಬೆನ್ನಲ್ಲೇ ಪ್ರತೀ ಶಾಲೆಯಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಶಿಕ್ಷಕರು, ಮುಖ್ಯೋಪಾಧ್ಯಾಯರು, ತರಗತಿ ಶಿಕ್ಷಕರು ಮತ್ತು ಇಬ್ಬರು ಸಹಾಯಕರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಮಾತನಾಡಿ, ಮಹಾರಾಷ್ಟ್ರದ ಬದ್ಲಾಪುರದಲ್ಲಿ ಶಾಲಾ ಆವರಣದಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಘಟನೆಗೆ ಇಡೀ ರಾಜ್ಯ ಖಂಡನೆ ವ್ಯಕ್ತಪಡಿಸುತ್ತಿದೆ. ನ್ಯಾಯಕ್ಕಾಗಿ ಆಗ್ರಹಿಸುತ್ತಿದೆ. ಮಹಾರಾಷ್ಟ್ರ ಶಕ್ತಿ ಕ್ರಿಮಿನಲ್ ಕಾನೂನಿಗೆ ಅನುಮೋದನೆ ನೀಡುವಂತೆ ನಾನು ಮತ್ತೊಮ್ಮೆ ರಾಷ್ಟ್ರಪತಿ ಭವನಕ್ಕೆ ಒತ್ತಾಯಿಸುತ್ತಿದ್ದೇನೆ. ಮಹಿಳೆ ಹಾಗೂ ಮಕ್ಕಳ ಸುರಕ್ಷತೆ ಖಾತ್ರಿಪಡಿಸದ ಸರ್ಕಾರಕ್ಕೆ ನಾಚಿಕೆಯಾಗಬೇಕು. ಹೊರಗೆ ಹೋಗುವಾಗ ಮಹಿಳೆಯರೇ ಜಾಗೃತಿ ವಹಿಸಬೇಕು, ಸಭ್ಯ ರೀತಿಯಲ್ಲಿ ಬಟ್ಟೆ ಧರಿಸಬೇಕೆಂದು ಹೇಳುತ್ತಾರೆ. ಇದೀಗ ಈ ಘಟನೆ ಬಗ್ಗೆ ಏನು ಹೇಳುತ್ತಾರೆಂದು ಪ್ರಶ್ನಿಸಿದ್ದಾರೆ.ಈ ನಡುವೆ ರೈಲ್ವೇ ನಿಲ್ದಾಣದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಬದ್ಲಾಪುರ ರೈಲು ನಿಲ್ದಾಣದಲ್ಲಿ ಸ್ಥಳೀಯ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ತನಿಖೆಗೆ ಸರ್ಕಾರ ಆದೇಶಏತನ್ಮಧ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ ಪ್ರಕರಣವನ್ನ ಎಸ್ಐಟಿ ತನಿಖೆಗೆ ಆದೇಶಿಸಿದೆ.ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಆರತಿ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ಪ್ರಕರಣದ ತನಿಖೆ ನಡೆಸಲಿದೆ ಎಂದು ಹೇಳಿದ್ದಾರೆ.ಅಲ್ಲದೆ, ಪ್ರಕರಣದ ತ್ವರಿತಗತಿ ತನಿಖೆ ನಡೆಸುವಂತೆ ಥಾಣೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.