ರಾಜಕೀಯ ಮಾಡುವ ಸಮಯ ಇದಲ್ಲ: ಪ್ರತಿಪಕ್ಷಗಳ ಟೀಕೆಗೆ ರೈಲ್ವೆ ಸಚಿವ ತಿರುಗೇಟು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸೋಮವಾರ ಮಧ್ಯಾಹ್ನ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದ ಬಳಿಯ ರಂಗಪಾಣಿಯಲ್ಲಿ ರೈಲು ಡಿಕ್ಕಿ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದರು. ನ್ಯೂ ಜಲ್ಪೈಗುರಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸೋಮವಾರ ಮಧ್ಯಾಹ್ನ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದ ಬಳಿಯ ರಂಗಪಾಣಿಯಲ್ಲಿ ರೈಲು ಡಿಕ್ಕಿ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದರು.ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವೈಷ್ಣವ್, ಅಪಘಾತಕ್ಕೆ ಕಾರಣವೇನು ಎಂಬುದರ ಕುರಿತು ಸಮಗ್ರ ತನಿಖೆ ನಡೆಸುವುದಾಗಿ ಭರವಸೆ ನೀಡಿದರು."ರಕ್ಷಣಾ ಕಾರ್ಯಾಚರಣೆ ಮುಗಿದಿದೆ. ಈಗ ಪುನಃಸ್ಥಾಪನೆಯತ್ತ ನಮ್ಮ ಗಮನ. ರಾಜಕೀಯ ಮಾಡುವುದಕ್ಕೆ ಇದು ಸಮಯವಲ್ಲ" ಎಂದು ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು.ಈಶಾನ್ಯ ಫ್ರಾಂಟಿಯರ್ ರೈಲ್ವೇ (ಎನ್‌ಎಫ್‌ಆರ್) ಅಧಿಕಾರಿಯ ಪ್ರಕಾರ, ಇಂದು ಬೆಳಗ್ಗೆ ರಂಗಪಾಣಿ ನಿಲ್ದಾಣದ ಬಳಿ ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 9 ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.