ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಆಂತರಿಕ ವಿಶೇಷ ತನಿಖಾ ತಂಡ ರಚನೆ! ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ತನಿಖೆಗೆ ಬೆಂಗಳೂರು ಪೊಲೀಸರು ಆಂತರಿಕ ವಿಶೇಷ ತನಿಖಾ ತಂಡ (ಎಸ್‌ಐಟಿ)ವನ್ನು ರಚನೆ ಮಾಡಿದ್ದಾರೆ. ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ತನಿಖೆಗೆ ಬೆಂಗಳೂರು ಪೊಲೀಸರು ಆಂತರಿಕ ವಿಶೇಷ ತನಿಖಾ ತಂಡ (ಎಸ್‌ಐಟಿ)ವನ್ನು ರಚನೆ ಮಾಡಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು, ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಎಸ್ ಗಿರೀಶ್ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದ್ದು, ವಿಜಯನಗರ ಸಹಾಯಕ ಪೊಲೀಸ್ ಆಯುಕ್ತ ಚಂದನ್ ಅವರನ್ನು ಮುಖ್ಯ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಈ ಆಂತರಿಕ ವಿಶೇಷ ತನಿಖಾ ತಂಡದಲ್ಲಿ ತನಿಖೆಗೆ ಸಹಾಯಕವಾಗಲು ಇನ್‌ಸ್ಪೆಕ್ಟರ್‌ಗಳು, ಸಬ್ ಇನ್‌ಸ್ಪೆಕ್ಟರ್‌ಗಳು ಮತ್ತು ಕಾನ್‌ಸ್ಟೆಬಲ್‌ಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.ಪ್ರಕರಣ ಅತ್ಯಂತ ಸೂಕ್ಷ್ಮವಾಗಿದ್ದು, ಹಲವು ಕೋನಗಳನ್ನು ಹೊಂದಿರುವುದರಿಂದ ಸಮಗ್ರ ತನಿಖೆ ನಡೆಸಲು ಆಂತರಿಕ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದರು.ಇದೇ ವೇಳೆ ಉನ್ನತ ಪೋಲೀಸ್ ಅಧಿಕಾರಿಗಳ ನಿಷ್ಪಕ್ಷಪಾತ ತನಿಖೆಗೆ ಶ್ಲಾಘನೆ ವ್ಯಕ್ತಪಡಿಸಿದರು. ನಮ್ಮ ತನಿಖಾಧಿಕಾರಿಗಳು ಸಂಪೂರ್ಣ ತನಿಖೆಯನ್ನು ಪ್ರಾರಂಭಿಸುವ ಮೂಲಕ ತ್ವರಿತವಾಗಿ ಕಾರ್ಯನಿರ್ವಹಿಸಿದ್ದಾರೆ. ನಿಷ್ಪಕ್ಷಪಾತವಾಗಿ ಕೆಲಸ ಮಾಡಿದ್ದಾರೆ, ಸಣ್ಣ ನಿರ್ಲಕ್ಷ್ಯವೂ ಕೂಡ ಪ್ರಕರಣಕ್ಕೆ ಬೇರೆಯದ್ದೇ ತಿರುವು ಪಡದುಕೊಳ್ಳುತ್ತಿತ್ತು ಎಂದು ಹೇಳಿದ್ದಾರೆ.