ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅನುಷ್ಠಾನಕ್ಕೆ ವಿರೋಧ: ಇದು ಕನ್ನಡಿಗರ ವಿರೋಧಿ ಎಂದ - ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಬ್ಭಾಗವಾಗಬಾರದು, ಹೀಗೇ ಉಳಿಯಬೇಕು. ಇಲ್ಲಿ ಕನ್ನಡಿಗರೇ ಸಾರ್ವಭೌಮರು. ನಗರದ ಕನ್ನಡಿಗರಿಗಾಗಿ ಉಳಿಯಬೇಕು. ಇಲ್ಲಿ ಒಬ್ಬ ಕನ್ನಡಿಗ ಮೇಯರ್ ಆಗಬೇಕು. ಬೆಂಗಳೂರು ವಿಭಜನೆಯನ್ನು ಬಿಜೆಪಿ ಮತ್ತು ಜೆಡಿಎಸ್ ವಿರೋಧಿಸುತ್ತದೆ. ಬೆಂಗಳೂರು: ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ವಿಭಜನೆಯಾಗಬಾರದು. ನಗರದ ಮೇಲೆ ಕನ್ನಡಿಗರಿಗೆ ಹಕ್ಕಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸೋಮವಾರ ಹೇಳಿದರು.ಭಾರತೀಯ ವಿದ್ಯಾಭವನದಲ್ಲಿ ಸೋಮವಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ-2024 ಬಿಲ್ ಸಾಧಕ-ಬಾಧಕಗಳ ಕುರಿತು ಚರ್ಚಿಸಲು ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅಶೋಕ್ ಅವರು ಮಾತನಾಡಿದರು.ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಬ್ಭಾಗವಾಗಬಾರದು, ಹೀಗೇ ಉಳಿಯಬೇಕು. ಇಲ್ಲಿ ಕನ್ನಡಿಗರೇ ಸಾರ್ವಭೌಮರು. ನಗರದ ಕನ್ನಡಿಗರಿಗಾಗಿ ಉಳಿಯಬೇಕು. ಇಲ್ಲಿ ಒಬ್ಬ ಕನ್ನಡಿಗ ಮೇಯರ್ ಆಗಬೇಕು. ಬೆಂಗಳೂರು ವಿಭಜನೆಯನ್ನು ಬಿಜೆಪಿ ಮತ್ತು ಜೆಡಿಎಸ್ ವಿರೋಧಿಸುತ್ತವೆ ಎಂದು ಹೇಳಿದರು.ಜಲಮಂಡಳಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಇತರೆ ಸ್ವತಂತ್ರ ಸಂಸ್ಥೆಗಳು ಮತ್ತು ಸರ್ಕಾರ ನಗರವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಗೆ ತರಲು ಪ್ರಯತ್ನಿಸುತ್ತಿವೆ. ಇವೆಲ್ಲವನ್ನೂ ಒಟ್ಟುಗೂಡಿಸಿ ಬಿಬಿಎಂಪಿಯು ಐಎಎಸ್ ಅಧಿಕಾರಿಗಳ ಮೂಲಕ ನಿರ್ವಹಣೆ ಮಾಡಿದರೆ, ಅದು ದೊಡ್ಡ ಉಲ್ಲಂಘನೆಯಾಗುತ್ತದೆ, ರಾಜ್ಯ ಸರ್ಕಾರದ ಈ ಮಸೂದೆಯು ಅಧಿಕಾರಿಗಳು, ಮಂಡಳಿಗಳು ಮತ್ತು ನಿಗಮಗಳನ್ನು ದುರ್ಬಲಗೊಳಿಸುತ್ತದೆ. ಮಸೂದೆ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಕೆಲವು ತಿದ್ದುಪಡಿಗಳಾಗಬೇಕು. ಈ ತಿದ್ದುಪಡಿ ಮಾಡಲು ಹಾಗೂ ವಾರ್ಡ್‌ ಹೆಚ್ಚಳಕ್ಕೆ ವಿಳಂಬವಾದರೆ ಹಿಂದಿನಂತೆ 198 ವಾರ್ಡ್‌ಗಳಿಗೆ ಚುನಾವಣೆ ನಡೆಸಬೇಕು. ಈ ಕುರಿತು ರಾಜ್ಯ ಸರ್ಕಾರಕ್ಕೆ ತಿಳಿಸಲಾಗುವುದು. ಮಂಡನೆಯಾಗಿರುವ ವಿಧೇಯಕದಿಂದ ಎಷ್ಟು ಸಮಸ್ಯೆಯಾಗಲಿದೆ ಎಂಬುದನ್ನು ಜನರಿಗೂ ತಿಳಿಸಲಾಗುವುದು ಎಂದು ತಿಳಿಸಿದರು.ಇಡೀ ದೇಶಕ್ಕೆ ಒಬ್ಬ ಪ್ರಧಾನಿ, ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ ಇರುವಂತೆ ಬೆಂಗಳೂರು ನಗರಕ್ಕೆ ಒಬ್ಬ ಮೇಯರ್ ಇರಲಿ. ಅವರ ಅಧಿಕಾರಾವಧಿ ಎರಡೂವರೆ ವರ್ಷ ಅಥವಾ ಐದು ವರ್ಷ ನಿಗದಿಪಡಿಸಿದರೂ ಅಡ್ಡಿಯಿಲ್ಲ ಎಂದರು.ಕಾಂಗ್ರೆಸ್ ಸರ್ಕಾರ ತಜ್ಞರು ನೀಡಿರುವ ವರದಿಯ ಶೇಕಡಾ ಇಪ್ಪತ್ತರಿಂದ ಮುವತ್ತರಷ್ಟನ್ನು ಮಾತ್ರ ವಿಧೇಯಕದಲ್ಲಿ ಅಳವಡಿಸಿಕೊಂಡಿದೆ ಎಂಬುದನ್ನು ವಿ.ರವಿಚಂದ್ರ ಅವರು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಯಾರಾದರೂ ಕೊರ್ಟ್‌ನಲ್ಲಿ ಪ್ರಶ್ನೆ ಮಾಡಿದರೆ ಬಿದ್ದು ಹೋಗುತ್ತದೆ ಎಂದೂ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅದರಲ್ಲಿರುವ ಲೋಪಗಳನ್ನು ಸರ್ಕಾರಕ್ಕೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಗುವುದು. ಒಂದು ವೇಳೆ ಒಪ್ಪದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಈ ಎಲ್ಲಾ ವಿಷಯಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಪ್ರಮುಖರ ಸಮಿತಿ ರಚಿಸಿ ವಿವರವಾಗಿ ವಿಧೇಯಕದ ಬಗ್ಗೆ ಅಧ್ಯಯನ ನಡೆಸಿ ಬದಲಾವಣೆ ಕುರಿತು ವರದಿ ನೀಡಲಾಗುವುದು ಎಂದು ವಿವರಿಸಿದರು.ಮಾಜಿ ಸಚಿವ ಹಾಗೂ ಶಾಸಕ ಕೆ.ಗೋಪಾಲಯ್ಯ ಮಾತನಾಡಿ, ಬೃಹತ್ ಬೆಂಗಳೂರು ಪ್ರಾಧಿಕಾರವು ಬಿಬಿಎಂಪಿಯನ್ನು ಹಾಳು ಮಾಡುತ್ತದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಯಂತಹ ಪರಿಕಲ್ಪನೆಯು ದೇಶದ ಇತರ ಕಾಸ್ಮೋಪಾಲಿಟನ್ ನಗರಗಳಲ್ಲಿ ವಿಫಲವಾಗಿದೆ ಎಂದರು.