ಸಂಡೂರು ಅರಣ್ಯದಲ್ಲಿ ಗಣಿಗಾರಿಕೆ: ಕೇಂದ್ರಕ್ಕೂ ಮುನ್ನ ಒಪ್ಪಿಗೆ ನೀಡಿದ್ದು ರಾಜ್ಯ ಸರ್ಕಾರ- ಎಚ್.ಡಿ. ಕುಮಾರಸ್ವಾಮಿ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸುಮಾರು 404 ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವ ಮುನ್ನಾ ರಾಜ್ಯ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿತ್ತು ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್ ಡಿ ಕುಮಾರಸ್ವಾಮಿ ಮಂಗಳವಾರ ಹೇಳಿದ್ದಾರೆ. . ಬೆಂಗಳೂರು: ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸುಮಾರು 404 ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವ ಮುನ್ನಾ ರಾಜ್ಯ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿತ್ತು ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್ ಡಿ ಕುಮಾರಸ್ವಾಮಿ ಮಂಗಳವಾರ ಹೇಳಿದ್ದಾರೆ.ಸಂಡೂರು ತಾಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ನಡೆಸಲು ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ (ಕೆಐಒಸಿಎಲ್) ಅನುಮತಿ ನೀಡಿದರೆ 99,000 ಮರಗಳನ್ನು ಕಡಿಯಬೇಕಾಗುತ್ತದೆ ಎಂಬ ವರದಿ ಕುರಿತು ಸಚಿವರು ಪ್ರತಿಕ್ರಿಯಿಸಿದರು.ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾರಂಭಕ್ಕೆ ಕೆಐಒಸಿಎಲ್‌ಗೆ ಕೇಂದ್ರ ಸಚಿವರು ಇತ್ತೀಚೆಗೆ ಅನುಮೋದನೆ ನೀಡಿದ್ದರು. ದೇವದಾರಿ ಯೋಜನೆ ಪ್ರಧಾನಿಯವರ 100 ದಿನದ ಕಾರ್ಯಸೂಚಿಯಲ್ಲಿದೆ ಎಂದು ತಿಳಿಸಿದ ಕುಮಾರಸ್ವಾಮಿ, ಆದಷ್ಟು ಬೇಗ ಗಣಿಗಾರಿಕೆ ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಅರಣ್ಯ ನಾಶಕ್ಕೆ ನಾನು ಸಹಿ ಮಾಡಿಲ್ಲ ಎಂದು ಅವರು ಹೇಳಿದರು.“ರಾಜ್ಯದಲ್ಲಿ ಉಕ್ಕು ಉತ್ಪಾದನೆಯಾಗಬೇಕು ಮತ್ತು ನಮ್ಮ ಯುವಕರಿಗೆ ಹೆಚ್ಚು ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಬೇಕು ಎಂಬ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜಿಡಿಪಿ ಬೆಳವಣಿಗೆಗೆ ಹೆಚ್ಚಿನ ಕೊಡುಗೆ ನೀಡುವ ಉದ್ದೇಶದಿಂದ, ಆತ್ಮನಿರ್ಭರ ಭಾರತ್ ಪರಿಕಲ್ಪನೆಯಂತೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.ಜನರಲ್ಲಿ ಆತಂಕ ಮೂಡಿಸಲು ಅಪಪ್ರಚಾರ ಮಾಡಲಾಗುತ್ತಿದೆ. 2019ರಲ್ಲಿ ದೇವದಾರಿ ಗಣಿಗಾರಿಕೆ ಯೋಜನೆಗೆ 404 ಹೆಕ್ಟೇರ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು, ನಂತರ ಕೇಂದ್ರ ಪರಿಸರ ಸಚಿವಾಲಯವೂ ಅನುಮತಿ ನೀಡಿದೆ. ಆದರೆ, ಕುಮಾರಸ್ವಾಮಿ ಅವರು ಗಣಿಗಾರಿಕೆಗೆ ಅನುಮತಿ ನೀಡುವ ಯೋಜನೆಗೆ ಸಹಿ ಹಾಕಿದ್ದಾರೆ ಎಂಬ ವರದಿಗಳು ಬಂದಿವೆ ಮತ್ತು ದೇವದಾರಿ ಪ್ರದೇಶದಲ್ಲಿ ಅರಣ್ಯ ಮತ್ತು ಜೀವವೈವಿಧ್ಯಕ್ಕೆ ಹಾನಿಯಾಗಲಿದೆ. 99,000 ಮರಗಳಿಗೆ ಹಾನಿಯಾಗುವ ವರದಿಗಳಿವೆ ಎಂದು ಅವರು ಹೇಳಿದರು.ಕೆಐಒಸಿಎಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕುಮಾರಸ್ವಾಮಿ, ಗಣಿಗಾರಿಕೆ ಯೋಜನೆ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಕೆಐಒಸಿಎಲ್ ಆರಂಭಿಸುವ ಮುನ್ನ ಸುಮಾರು 194 ಕೋಟಿ ರೂ. ವೆಚ್ಚದಲ್ಲಿ 808 ಹೆಕ್ಟೇರ್ ಪ್ರದೇಶದಲ್ಲಿ ಪರ್ಯಾಯ ಅರಣ್ಯವನ್ನು ಬೆಳೆಸಲಿದೆ. ಅದಕ್ಕಾಗಿ ಅರಣ್ಯ ಇಲಾಖೆಗೆ ಹಣ ನೀಡಲಾಗಿದೆ. ಜೀವವೈವಿಧ್ಯಕ್ಕೆ ಧಕ್ಕೆಯಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.ಈ ಮಧ್ಯೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಘಟಕದ (ವಿಐಎಸ್ಪಿ) ಪುನರುಜ್ಜೀವನದ ಬಗ್ಗೆಯೂ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಇದು ಉತ್ತಮ ಕಾರ್ಖಾನೆ, ಕರ್ನಾಟಕದ ಹೆಗ್ಗುರುತು. ಅದನ್ನು ಉಳಿಸುವ ಬಗ್ಗೆ ಯೋಚಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.