ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಶಿವಕುಮಾರ್ ಸೋಮವಾರ ಹೇಳಿದ್ದಾರೆ. ಬೆಂಗಳೂರು: ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಶಿವಕುಮಾರ್ ಸೋಮವಾರ ಹೇಳಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಗಿರಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣದ ತನಿಖೆಗೆ ಮುಖ್ಯಮಂತ್ರಿ ಆದೇಶ ನೀಡಿದ್ದಾರೆ. ತನಿಖೆ ಮುಂದುವರಿದಿದ್ದು, ತಪ್ಪಿತಸ್ಥರನ್ನು ಕಟಕಟೆಗೆ ತರಲಾಗುವುದು. ಕಾಂಗ್ರೆಸ್ ಎಲ್ಲಾ ಪಂಗಡದ ಜನರನ್ನು ಸಮಾನವಾಗಿ ಪರಿಗಣಿಸುತ್ತದೆ, ಆದರೆ ಯಾರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ತಪ್ಪಿತಸ್ಥರನ್ನು ಶಿಕ್ಷಿಸಲು ಸರಕಾರ ಬದ್ಧವಾಗಿದೆ ಎಂದರು.ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಪ್ರಗತಿಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ, ರಾಜ್ಯ ಸರ್ಕಾರ ದೇಶದೊಳಗೆ ಯಾವುದೇ ಕ್ರಮ ಕೈಗೊಳ್ಳಬಹುದು ಆದರೆ ಆರೋಪಿ ವಿದೇಶದಲ್ಲಿರುವ ಪ್ರಕರಣಗಳಲ್ಲಿ ಕೇಂದ್ರ ಸರ್ಕಾರ ಹೆಚ್ಚು ಮುತುವರ್ಜಿ ವಹಿಸಬೇಕು .ಗೃಹ ಸಚಿವರು ಪ್ರಕರಣದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ ಎಂದರು.ಮೈಸೂರಿನ ಹೊಟೇಲ್‌ನಲ್ಲಿ ಪ್ರಧಾನಿ ತಂಗಿದ್ದಕ್ಕಾಗಿ ಪಾವತಿಸದ ಬಿಲ್‌ಗಳ ಕುರಿತು ಕೇಳಿದ ಪ್ರಶ್ನೆಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ ಡಿಕೆ ಶಿವಕುಮಾರ್, ರಾಷ್ಟ್ರ ರಾಜಧಾನಿಗೆ ಭೇಟಿ ನೀಡುತ್ತಿರುವ ವಿಷಯವನ್ನು ಖಚಿತಪಡಿಸಿದರು. ಆದರೆ, ಪರಿಷತ್ ಚುನಾವಣೆಗಾಗಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ತೆರಳುತ್ತಿದ್ದಾರೆಯೇ? ಎಂಬುದಕ್ಕೆ ಉತ್ತರಿಸಲು ನಿರಾಕರಿಸಿದರು.ಕೆಲವು ಕಾಂಗ್ರೆಸ್ ನಾಯಕರು ಪಿಂಪ್‌ಗಳು ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ, ಕುಮಾರಸ್ವಾಮಿ ಅವರು ಏನು ಹೇಳಿದ್ದಾರೆಂದು ನನಗೆ ಗೊತ್ತಿಲ್ಲ. ಅವರು ಏನು ಹೇಳಿದ್ದಾರೆಂದು ತಿಳಿದುಕೊಂಡು ನಂತರ ಉತ್ತರಿಸುವುದಾಗಿ ತಿಳಿಸಿದರು.