ರಾಯಚೂರು: ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ, ಇಬ್ಬರು ಮಕ್ಕಳು ಸಾವು, ಹಲವು ವಿದ್ಯಾರ್ಥಿಗಳಿಗೆ ಗಾಯ ಲೊಯಲ್ ಶಾಲಾ ಮಕ್ಕಳನ್ನು ಕರೆದುಕೊಂಡು ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಮಾನ್ವಿ: ರಾಜ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಶಾಲಾ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಹಲವು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ಗುರುವಾರ ನಡೆದಿದೆ.ಲೊಯಲ್ ಶಾಲಾ ಮಕ್ಕಳನ್ನು ಕರೆದುಕೊಂಡು ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದರೆ, ಒಬ್ಬ ಬಾಲಕ ಹಾಗೂ ಚಾಲಕನ ಸ್ಥಿತಿ ಗಂಭೀರವಾಗಿದೆ. ಮೂರು ಮಕ್ಕಳ ಕಾಲುಗಳು ತುಂಡಾಗಿದ್ದು, ಅವರಿಗೆ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.ಜಿಲ್ಲಾಧಿಕಾರಿ ಕೆ. ನಿತೀಶ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮೃತಪಟ್ಟ ಮಕ್ಕಳ ಪಾಲಕರಿಗೆ ತಲಾ 5 ಲಕ್ಷ ಹಾಗೂ ರಸ್ತೆ ಸಾರಿಗೆ ಸಂಸ್ಥೆಯಿಂದಲೂ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.