ಡಿವೈಡರ್‌ಗೆ ಬೈಕ್‌ ಡಿಕ್ಕಿ: ರಾಜಕಾಲುವೆಗೆ ಬಿದ್ದ ಯುವಕ ಇನ್ನೂ ನಾಪತ್ತೆ! ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ರಾಜಕಾಲುವೆಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು: ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ರಾಜಕಾಲುವೆಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಬ್ಯಾಟರಾಯನಪುರ ನಿವಾಸಿ ಹೇಮಂತ್ ಕುಮಾರ್ (28) ಶುಕ್ರವಾರ ರಾತ್ರಿ ಸುಮಾರು 10.30ಕ್ಕೆ ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೋ ರೈಲು ನಿಲ್ದಾಣದ ಬಳಿ ಬೈಕ್ ನಲ್ಲಿ ಚಲಿಸುತ್ತಿದ್ದಾಗ ಈ ಘಟನೆ ನಡೆದಿದೆ.ಕಳೆದ 2 ದಿನಗಳಿಂದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸವಾರನ ಪತ್ತೆಗೆ ರಾಜಕಾಲುವೆಯಲ್ಲಿ ಶೋಧ ಕಾರ್ಯ ಕೈಗೊಂಡಿದ್ದು, ಆತನ ಸುಳಿವು ಇನ್ನೂ ಪತ್ತೆಯಾಗಿಲ್ಲ. ಭಾನುವಾರವೂ ಶೋಧ ಕಾರ್ಯ ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪೋರ್ಟರ್ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಹೇಮಂತ್ , ಶುಕ್ರವಾರ ರಾತ್ರಿ ಕೆಲಸ ಮುಗಿಸಿಕೊಂಡು ಮೈಸೂರು ರಸ್ತೆಯ ಜ್ಞಾನಭಾರತಿ ಕಡೆಯಿಂದ ಬ್ಯಾಟರಾಯನಪುರ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಮಾರ್ಗ ಮಧ್ಯೆ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಹೇಮಂತ್‌ ಪಕ್ಕದಲ್ಲೇ ಇರುವ ರಾಜಕಾಲುವೆಗೆ ಹಾರಿ ಬಿದ್ದಿದ್ದಾರೆ. ರಾತ್ರಿ ಸುರಿದ ಭಾರೀ ಮಳೆಯಿಂದ ರಾಜಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಹೇಮಂತ್‌ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಂಡು ಶುಕ್ರವಾರ ತಡರಾತ್ರಿವರೆಗೂ ರಾಜಕಾಲುವೆಯಲ್ಲಿ ಶೋಧ ಕಾರ್ಯ ನಡೆಸಿದರು. ಈ ವೇಳೆ ಹೇಮಂತ್ ರ ಬೈಕ್ ಪತ್ತೆಯಾಗಿತ್ತಾದರೂ ಹೇಮಂತ್‌ ಪತ್ತೆಯಾಗಿರಲಿಲ್ಲ.ಶನಿವಾರ ಮುಂಜಾನೆಯಿಂದ ತಡರಾತ್ರಿವರೆಗೂ ರಾಜಕಾಲುವೆಯಲ್ಲಿ ಸುಮಾರು 2-3 ಕಿ.ಮೀ. ಶೋಧ ಕಾರ್ಯ ನಡೆಸಿದರೂ ಯಾವುದೇ ಸುಳಿವು ಸಿಗಲಿಲ್ಲ. ಹೀಗಾಗಿ ಭಾನುವಾರವೂ ಶೋಧ ಕಾರ್ಯ ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.