ಯಾದಗಿರಿ ಪಿಎಸ್ಐ ಸಾವು: ಸಿಬಿಐ ತನಿಖೆ ಅಗತ್ಯ ಇಲ್ಲ ಎಂದ ಪರಮೇಶ್ವರ; 50 ಲಕ್ಷ ರೂ. ಪರಿಹಾರ ಘೋಷಣೆ ಪೋಸ್ಟಿಂಗ್‌ಗಾಗಿ ಕಾಂಗ್ರೆಸ್ ಶಾಸಕ ಮತ್ತು ಅವರ ಪುತ್ರ ಹಣ ಕೇಳುವ ಮೂಲಕ ಮಾನಸಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಕೊಪ್ಪಳ: ಯಾದಗಿರಿ ನಗರದ ಮನೆಯಲ್ಲಿ ಶವವಾಗಿ ಪತ್ತೆಯಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ ಅವರ ಕುಟುಂಬಕ್ಕೆ ಗೃಹ ಸಚಿವ ಜಿ ಪರಮೇಶ್ವರ ಅವರು ಬುಧವಾರ 50 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಆದರೆ, ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವುದಿಲ್ಲ ಎಂದು ಹೇಳಿದ್ದಾರೆ.ಕೊಪ್ಪಳ ಜಿಲ್ಲೆಯ ಸೋಮನಾಳ ಗ್ರಾಮದ ಮೃತ ದಲಿತ ಪೊಲೀಸ್ ಅಧಿಕಾರಿಯ ನಿವಾಸಕ್ಕೆ ಇಂದು ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ''ಎಸ್‌ಐ ಪತ್ನಿಗೆ ಕೆಲಸ ಕೊಡಿಸುತ್ತೇವೆ. ರಾಯಚೂರು ಕೃಷಿ ವಿಶ್ವವಿದ್ಯಾಲಯ ಅಥವಾ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿಯಲ್ಲಿ(ಜೆಸ್ಕಾಂ) ಕೆಲಸ ಕೇಳಿದ್ದಾರೆ. ಉದ್ಯೋಗ ಕಲ್ಪಿಸುವ ಸಂಬಂಧ ಸಿಎಂ ಸಿದ್ದರಾಮಯ್ಯ ಜತೆ ಮಾತನಾಡುತ್ತೇನೆ. ಗೃಹ ಇಲಾಖೆಯಿಂದ 50 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಪರಮೇಶ್ವರ ಹೇಳಿದ್ದಾರೆ.ಪೋಸ್ಟಿಂಗ್‌ಗಾಗಿ ಕಾಂಗ್ರೆಸ್ ಶಾಸಕ ಮತ್ತು ಅವರ ಪುತ್ರ ಹಣ ಕೇಳುವ ಮೂಲಕ ಮಾನಸಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಆರೋಪಗಳು ಕೇಳಿಬಂದ ದಿನವೇ ನಾನು ಅಪರಾಧ ತನಿಖಾ ಇಲಾಖೆಯಿಂದ(ಸಿಐಡಿ) ತನಿಖೆಗೆ ಆದೇಶಿಸಿದೆ. ಯಾವುದೇ ಪೊಲೀಸ್ ಅಧಿಕಾರಿಯನ್ನು ವರ್ಗಾವಣೆ ಮಾಡುವ ಮೊದಲು ನಾವು ಎರಡು ವರ್ಷಗಳ ಕಾಲಾವಧಿಯನ್ನು ನಿಗದಿಪಡಿಸಿದ್ದೇವೆ ಎಂದು ಪರಮೇಶ್ವರ ಸಮರ್ಥಿಸಿಕೊಂಡರು.ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬ ಬಿಜೆಪಿ ಬೇಡಿಕೆಯ ಬಗ್ಗೆ ಕೇಳಿದಾಗ, ಪ್ರತಿಪಕ್ಷಗಳಿಂದ ನಾನು ಕಲಿಯಬೇಕಾಗಿಲ್ಲ. ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವುದಿಲ್ಲ. ಇದು ಸಿಬಿಐ ತನಿಖೆಗೆ ಯೋಗ್ಯವಾದ ಪ್ರಕರಣವಲ್ಲ. ಎಸ್‌ಐ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಶ್ರಮಿಸುತ್ತೇವೆ. ಅವರಿಗೆ ನ್ಯಾಯ ಸಿಗದಿದ್ದಲ್ಲಿ ಆ ಬಗ್ಗೆ ನೋಡುತ್ತೇವೆ' ಎಂದರು.“ಏಳು ತಿಂಗಳೊಳಗೆ ಪರಶುರಾಮ ಹೇಗೆ ವರ್ಗಾವಣೆಯಾದರೋ ಗೊತ್ತಿಲ್ಲ. ಅವದಿಗೂ ಮೊದಲೇ ವರ್ಗಾವಣೆ ಬಗ್ಗೆ ಕೂಡ ಸಿಐಡಿ ತನಿಖೆಯಲ್ಲಿ ಹೊರಗೆ ಬರುತ್ತದೆ. ಪೊಲೀಸರು ಎಫ್‌ಐಆರ್‌ ದಾಖಲಿಸುವಲ್ಲಿ ಯಾವುದೇ ವಿಳಂಬ ಮಾಡಿಲ್ಲ ಎಂದು ಪರಮೇಶ್ವರ ಹೇಳಿದ್ದಾರೆ.ಎಫ್ಐಆರ್ ದಾಖಲಾಗಲು ವಿಳಂಬವಾಗಿಲ್ಲ. ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ನಂತರ ಎಫ್ಐಆರ್ ದಾಖಲಿಸಿದ್ದಾರೆ. ಪ್ರಾಥಮಿಕ ತನಿಖೆಯಾದ ನಂತರ ದೂರು ದಾಖಲಾಗುತ್ತದೆ. ನಂತರ ಆರೋಪಿಗಳನ್ನು ಬಂಧಿಸಲಾಗುತ್ತದೆ. ಆರ್ ಅಶೋಕ್ ಅವರು ಗೃಹ ಸಚಿವರಾಗಿದ್ದರು. ಅವರು ಇದ್ದಾಗ ಸಿಐಡಿ ಚೆನ್ನಾಗಿತ್ತಾ? ಎಂದು ತಿರುಗೇಟು ನೀಡಿದರು.ವರ್ಗಾವಣೆಗೆ ಹಣ ಪಡೆಯಾಲಾಗಿದೆ ಎಂದು ಕುಟುಂಬ ಆರೋಪ ಮಾಡಿದೆ. ಆದರೆ ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಭ್ರಷ್ಟಾಚಾರ ನಿಲ್ಲಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತೇವೆ. ಇದಕ್ಕಾಗಿ ಸಮಯಬೇಕು ಎಂದು ಹೇಳಿದರು.