ಮುಡಾ ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೆ ವಿಧಾನಸಭೆಯಲ್ಲಿ 6 ವಿಧೇಯಕ ಅಂಗೀಕಾರ ಇಂದು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆಯೇ ಆರು ವಿಧೇಯಕಗಳನ್ನು ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಅಕ್ರಮವಾಗಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಗುರುವಾರವೂ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದವು.ಇಂದು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆಯೇ ಆರು ವಿಧೇಯಕಗಳನ್ನು ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು.ಕರ್ನಾಟಕ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳು(ನೇಮಕಾತಿ ಮೀಸಲಾತಿ ಇತ್ಯಾದಿ) ತಿದ್ದುಪಡಿ ಮಸೂದೆ, 2024, 2024ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕ, ಕರ್ನಾಟಕ ಪ್ರಾಚೀನ, ಐತಿಹಾಸಿಕ ಸ್ಮಾರಕಗಳು, ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ (ತಿದ್ದುಪಡಿ) ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಹಾಗೂ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ವಿಧೇಯಕವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ವಿಧೇಯಕ ಕುರಿತು ಮಾತನಾಡಿ, ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕ ಮತ್ತು ಪುರಾತತ್ವ ಸ್ಥಳಗಳ ಸಂರಕ್ಷಣೆ ಮಾಡುವ ಕರ್ತವ್ಯವಿದೆ. ಸ್ಮಾರಕಗಳನ್ನು ದತ್ತು ತೆಗೆದುಕೊಳ್ಳಲು ಈ ವಿಧೇಯಕ ಅವಕಾಶ ಮಾಡಿಕೊಡಲಿದೆ. ಸೊಸೈಟಿ, ಸಹಕಾರ ಸಂಘಗಳು, ಟ್ರಸ್ಟ್ಗಳು, ಸರ್ಕಾರೇತರ ಸಂಸ್ಥೆಗಳು ಆಸಕ್ತಿ ಉಳ್ಳ ವ್ಯಕ್ತಿಗಳನ್ನು ಸ್ಮಾರಕ ಪಟ್ಟಿಯಲ್ಲಿ ಸೇರಿಸುವುದಕ್ಕೆ ಅರ್ಹರಾಗಿಸುವುದಕ್ಕೆ ತಿದ್ದುಪಡಿ ತರಲಾಗಿದೆ ಎಂದು ಹೇಳಿದರು.ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮಂಡಿಸಿದ ಮಾತನಾಡಿದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಯಲ್ಲಮ್ಮ ದೇವಾಲಯಕ್ಕೆ ಕರ್ನಾಟಕ, ಗೋವಾ, ಆಂಧ್ರ, ತೆಲಂಗಾಣದಿಂದ ವಾರ್ಷಿಕ 80 ಲಕ್ಷದಿಂದ 1 ಕೋಟಿ ಭಕ್ತರು ಬರುತ್ತಾರೆ. ಹೀಗಾಗಿ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಮತ್ತು ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಸ್ವತಂತ್ರ ಶಾಸನದ ಪ್ರಾಧಿಕಾರದ ರಚನೆಗೆ ಉಪಂಧ ಕಲ್ಪಿಸಲು ಈ ವಿಧೇಯಕವನ್ನು ತರಲಾಗಿದೆ. ರಾಜ್ಯಮಟ್ಟದಲ್ಲಿ ಒಂದು ಸಮಿತಿ, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇನ್ನೊಂದು ಸಮಿತಿ ಕಾರ್ಯ ನಿರ್ವಹಿಸಲಿದೆ. ಆ ಮೂಲಕ ದೇವಸ್ಥಾನದ ಅಭಿವೃದಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.