ಮಹಿಳೆಯರನ್ನು ಕಾಂಗ್ರೆಸ್‌'ನ ಭದ್ರ ಬುನಾದಿ ಮಾಡಲಾಗುವುದು: ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಮಹಿಳಾ ಘಟಕದ ಪದಾಧಿಕಾರಿಗಳು, ಪಕ್ಷದ ಹಿರಿಯ ನಾಯಕಿಯರ ಜೊತೆ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು. ಬೆಂಗಳೂರು: ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಲಾಗುವುದು. ಮಹಿಳೆಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರನ್ನು ಪಕ್ಷದ ಭದ್ರ ಬುನಾದಿಯನ್ನಾಗಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಹೇಳಿದರು.ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಮಹಿಳಾ ಘಟಕದ ಪದಾಧಿಕಾರಿಗಳು, ಪಕ್ಷದ ಹಿರಿಯ ನಾಯಕಿಯರ ಜೊತೆ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು.ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಹಿರಿಯ ನಾಯಕರಾದ ಬಿಂಬಾ ರಾಯ್ಕರ್, ಸುಶೀಲಾ ಕೃಷ್ಣಮೂರ್ತಿ, ಪಂಕಜಾಕ್ಷಿ, ಮನೋರಮಾ ಮತ್ತು ಪ್ಯಾರೇಜಾನ್ ಅವರನ್ನು ಸನ್ಮಾನಿಸಿದರು. ಇದೇ ವೇಳೆ ಪಕ್ಷದ ಕಾರ್ಯಕರ್ತರ ಅಹವಾಲುಗಳನ್ನೂ ಆಲಿಸಿದರು.ಬಳಿಕ ಮಾತನಾಡಿದ ಅವರು, ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ‘ಗ್ಯಾರಂಟಿ’ ಯೋಜನೆಗಳ ಬಗ್ಗೆ ಜನರ ಭಾವನೆ ಏನಿದೆ? ನಾವು ಇಷ್ಟು ಉತ್ತಮ ಯೋಜನೆ ಕೊಟ್ಟಿದ್ದರೂ ಜನರ ನಿರೀಕ್ಷೆಗಳೇನು? ಎಂಬ ಕುರಿತು ಚರ್ಚಿಸಲು ಹಿರಿಯ ನಾಯಕಿಯರ ಸಭೆ ಕರೆಯಲಾಗಿತ್ತು. ಸುಮಾರು 40 ಮಂದಿ ನಾಯಕಿಯರು ತಮ್ಮ ಅನುಭವಗಳನ್ನು ಆಧರಿಸಿ, ಸಲಹೆ ನೀಡಿದ್ದಾರೆ.ಪಕ್ಷದ ಘಟಕಗಳಲ್ಲಿ ಮಹಿಳೆಯರಿಗೆ ಸಮಾನ ಸ್ಥಾನಮಾನ ನೀಡುವಂತೆ ಕೆಲವರು ಬೇಡಿಕೆ ಇಟ್ಟಿದ್ದಾರೆ. ನಮ್ಮ ಪಕ್ಷ ಈಗಾಗಲೇ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮೀಸಲಾತಿ ನೀಡಿದ್ದು, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಮಹಿಳಾ ಮೀಸಲಾತಿ ತರಲು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.ಬೆಂಗಳೂರು ಗ್ರಾಮಾಂತರದ ಮಾಜಿ ಸಂಸದ ಡಿ.ಕೆ. ಸುರೇಶ್‌ ಅವರು ಜನಸ್ಪಂದನಾ ಕಾರ್ಯಕ್ರಮ ಮಾಡಿದಾಗ ಅಧಿಕಾರಿಗಳು ಹೋಗಿದ್ದರು ಎಂಬ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, ನಾನು ಜನಸಂಪರ್ಕ ಸಭೆ ಮಾಡಿದ್ದೇನೆಯೇ ಹೊರತು, ‌ಮಾಜಿ ಸಂಸದರು ಯಾವುದೇ ಕಾರ್ಯಕ್ರಮ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.