ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ ಕಿಡಿ ಕೇಂದ್ರ ಬಜೆಟ್ ಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ಈ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಚೊಂಬು ಕೊಟ್ಟಿದ್ದಾರೆ, ಕರ್ನಾಟಕಕ್ಕೆ ಪಂಗನಾಮ ಹಾಕಿದ್ದಾರೆ ಎಂದು ತೀಕ್ಷ್ಣವಾಗಿ ಟೀಕಿಸಿದರು. ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ 2024-25ನೇ ಸಾಲಿನ ಬಜೆಟ್ ನಲ್ಲಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿ ಕಾರಿದ್ದಾರೆ.ಕೇಂದ್ರ ಬಜೆಟ್ ಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ಈ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಚೊಂಬು ಕೊಟ್ಟಿದ್ದಾರೆ, ಕರ್ನಾಟಕಕ್ಕೆ ಪಂಗನಾಮ ಹಾಕಿದ್ದಾರೆ ಎಂದು ತೀಕ್ಷ್ಣವಾಗಿ ಟೀಕಿಸಿದರು.ಆಂಧ್ರಪ್ರದೇಶ-ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ ಕೊಟ್ಟಿದ್ದಾರೆ, ಬೇರೆ ರಾಜ್ಯಗಳಿಗೆ ಯಾವುದೇ ಕೊಡುಗೆ ನೀಡಿಲ್ಲ. ಏಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಿ ಉಳಿಯಬೇಕಂದ್ರೆ ಆ ರಾಜ್ಯಗಳ ಸಹಕಾರ ಬೇಕು, ಅದಕ್ಕಾಗಿ ವಿಶೇಷ ಅನುದಾನವನ್ನ ಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.ನಿರ್ಮಲಾ ‌ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಹೋದವರು. ಕರ್ನಾಟಕದ ಹಿತ ಕಾಪಾಡಿ, ನ್ಯಾಯ ಕೊಡ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಕರ್ನಾಟಕದ ಜನತೆಗೆ ನಿರಾಸೆ ಮಾಡಿದ್ದಾರೆ. ವಿಪತ್ತು ಪರಿಹಾರ ನಿಧಿ ಹೆಚ್ಚಳಕ್ಕೆ ಮನವಿ ಮಾಡಿದ್ದೆವು, ಆ ಬಗ್ಗೆ ಏನನ್ನೂ ಘೋಷಿಸಿಲ್ಲ. ನೀರಾವರಿ ಯೋಜನೆಗಳ ಅನುಷ್ಠಾನದ ನಿರೀಕ್ಷೆಯಲ್ಲಿದ್ವಿ, ಅದನ್ನೂ ಮಾಡಿಲ್ಲ ಎಂದು ಸಿಎಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಕಲ್ಯಾಣ ಕರ್ನಾಟಕಕ್ಕೆ ಮ್ಯಾಚಿಂಗ್ ಗ್ರ್ಯಾಂಟ್ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ, ಮಹದಾಯಿ, ಮೇಕೆದಾಟು ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ. ರೈತರಿಗೂ ಯಾವುದೂ ಪ್ರಯೋಜನ ಆಗಿಲ್ಲ, ರೈತರು-ಬಡವರಿಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಕಾಯ್ದೆ ಮಾಡಿ ಅಂತ ರೈತರಿಂದ ಬಹಳದಿನಗಳ ಬೇಡಿಕೆ ಇತ್ತು, ಆದೂ ಆಗಿಲ್ಲ. ಇಲಾಖಾವಾರು ಅನುದಾನ ತುಂಬಾ ಕಡಿಮೆ‌ಕೊಟ್ಟಿದ್ದಾರೆ. ಶಿಕ್ಷಣಕ್ಕೆ 1.25 ಲಕ್ಷ ಕೋಟಿ ಅಷ್ಟೇ ಕೊಟ್ಟಿದ್ದಾರೆ ಎಂದು ಟೀಕಿಸಿದರು.ದಲಿತರ ಬಗ್ಗೆ ಮಾತನಾಡುವ ಇವರು ಅನುದಾನ ಕಡಿಮೆ ಮಾಡಿದ್ದಾರೆ. ಕಳೆದ ಮಧ್ಯಂತರ ಬಜೆಟ್‌ನಲ್ಲಿ 9409 ಕೋಟಿ ರೂ. ಮೀಸಲಿಟ್ಟಿದ್ರು. ಆದ್ರೆ ಈಗ 6300 ಕೋಟಿ ರೂ. ಮಾತ್ರ ಮೀಸಲಿಟ್ಟಿದ್ದಾರೆ. ಐವರು ಕೇಂದ್ರ ಸಚಿವರಿದ್ದರೂ ರಾಜ್ಯಕ್ಕೆ ಯಾವುದೇ ಪ್ರಯೋಜನ ಆಗಿಲ್ಲ. ಕೈಗಾರಿಕಾ, ರೈಲ್ವೆ ಕೃಷಿ ಕ್ಷೇತ್ರಗಳಿಗೆ ಯಾವುದೆ ಕೊಡುಗೆ ಇಲ್ಲ. ಬಹಳ ದಿನಗಳಿಂದ ರಾಯಚೂರಿಗೆ ಆಸ್ಪತ್ರೆ ಕೇಳಿದ್ವಿ, ಕೊಟ್ಟಿಲ್ಲ. ಸಂಪೂರ್ಣ ನಿರಾಶದಾಯಕ ಜನವಿರೋಧಿ ಬಜೆಟ್ ಇದು. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಪಂಗನಾಮ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.