ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಸಂಬಂಧ ಜೊತೆ ಚರ್ಚೆ: ಯೋಗೇಶ್ವರ್ ಪರ ಅಶೋಕ್ ಬ್ಯಾಟಿಂಗ್ ನಾನು ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಯೋಗೇಶ್ವರ ಅವರೊಂದಿಗೆ ಮಾತನಾಡಿದ್ದೇವೆ. ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸುತ್ತೇವೆ ಎಂದು ಅಶೋಕ ತಿಳಿಸಿದ್ದಾರೆ. ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಸಿ.ಪಿ. ಯೋಗೇಶ್ವರ್ ಅವರಿಗೆ ಟಿಕೆಟ್‌ ನೀಡುವ ಕುರಿತು ಪಕ್ಷದ ವರಿಷ್ಠರು ಹಾಗೂ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಜೊತೆ ಚರ್ಚಿಸಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಹೇಳಿದರು.ನಾನು ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಯೋಗೇಶ್ವರ ಅವರೊಂದಿಗೆ ಮಾತನಾಡಿದ್ದೇವೆ. ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸುತ್ತೇವೆ ಎಂದು ಅಶೋಕ ತಿಳಿಸಿದ್ದಾರೆ. ನಾವು ದೆಹಲಿಗೆ ಭೇಟಿ ನೀಡಿದಾಗ ಯೋಗೇಶ್ವರ ಅವರಿಗೆ ಟಿಕೆಟ್ ನೀಡುವಂತೆ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡುತ್ತೇವೆ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ಇದರ ನಡುವೆ ಯೋಗೇಶ್ವರ ಅವರು ಟಿಕೆಟ್‌ಗಾಗಿ ಲಾಬಿ ಮುಂದುವರೆಸಿದ್ದಾರೆ, ನವದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಒಂದೆರಡು ವಾರಗಳ ಹಿಂದೆ ಒಂದು ಸುತ್ತಿನ ಮಾತುಕತೆ ನಡೆಸಿ ಎನ್‌ಡಿಎ ತನ್ನ ಅಭ್ಯರ್ಥಿಯನ್ನು ಪರಿಗಣಿಸದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಎಚ್ಚರಿಕೆ ನೀಡಿದ್ದರು.ಮತ್ತೊಂದೆಡೆ, ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಆಗಾಗ ಭೇಟಿ ನೀಡುತ್ತಿದ್ದು, ಎನ್‌ಡಿಎ ಅಭ್ಯರ್ಥಿಯಾಗಬಹುದು ಎಂಬ ಊಹಾ ಪೋಹಾ ಮೂಡಿಸುತ್ತಿದ್ದಾರೆ. ಮಂಡ್ಯ ಸಂಸದರಾಗಿ ಆಯ್ಕೆಯಾಗುವ ಮುನ್ನ ಚನ್ನಪಟ್ಟಣ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಬಿಜೆಪಿಗೆ ಸ್ಥಾನ ಬಿಟ್ಟುಕೊಡುವ ಉತ್ಸಾಹದಲ್ಲಿಲ್ಲ. ಸಂಡೂರು ಮತ್ತು ಶಿಗ್ಗಾಂವ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿ ತನ್ನ ಕೈವಶ ಮಾಡಿಕೊಳ್ಳುವುದರಿಂದ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್ ಬಳಿ ಉಳಿಸಿಕೊಳ್ಳುವ ಸಾಧ್ಯತೆ ಇದೆ.