ಮೂರು ಕ್ಷೇತ್ರಗಳ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟಿಸದ ಆಯೋಗ; ಅಭ್ಯರ್ಥಿ ಯಾರಾಗ್ತಾರೆ? ಕುತೂಹಲ ಮುಂದುವರಿಕೆ ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಪಕ್ಷಗಳು ಅಧಿಕಾರದಲ್ಲಿರುವುದರಿಂದ ಕಾಂಗ್ರೆಸ್ ಮತ್ತು ಎನ್‌ಡಿಎ ನಡುವೆ ತೀವ್ರ ಪೈಪೋಟಿ ಕಂಡುಬರಲಿದೆ. ಬೆಂಗಳೂರು: ರಾಜ್ಯದಲ್ಲಿನ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಇನ್ನೂ ಪ್ರಕಟಿಸಿಲ್ಲ. ಹೀಗಾಗಿ ಮೂರು ಪ್ರಮುಖ ರಾಜಕೀಯ ಪಕ್ಷಗಳು ಚುನಾವಣೆಗೆ ಸಿದ್ಧರಾಗಲು ಈಗ ಸಾಕಷ್ಟು ಸಮಯವಿದೆ. ಇದರೊಂದಿಗೆ ಚನ್ನಪಟ್ಟಣ, ಸಂಡೂರು, ಶಿಗ್ಗಾಂವ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಇನ್ನೂ ಕೆಲ ಕಾಲ ಕುತೂಹಲ ಮುಂದುವರೆಯಲಿದೆ.ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಕ್ರಮವಾಗಿ ಈ ಸ್ಥಾನಗಳನ್ನು ಹೊಂದಿದ್ದು, ಚುನಾವಣೆ ಅವರಿಗೆ ಪ್ರತಿಷ್ಟೆಯಾಗಿದೆ. ಸಂಡೂರು ಮತ್ತು ಶಿಗ್ಗಾಂವಿಯಲ್ಲಿ ಬಿಜೆಪಿ ಹೈಕಮಾಂಡ್ ತೀರ್ಮಾನಿಸಲಿದ್ದು, ಚನ್ನಪಟ್ಟಣದಿಂದ ತಮ್ಮ ಪತ್ನಿ ಅನಿತಾ ಅಥವಾ ಮಗ ನಿಖಿಲ್ ಅವರನ್ನು ಕಣಕ್ಕಿಳಿಸಲು ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಯೋಜಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಮಾಜಿ ಸಚಿವ, ಬಿಜೆಪಿ ಎಂಎಲ್‌ಸಿ ಸಿಪಿ ಯೋಗೇಶ್ವರ ಕೂಡ ಈ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ ಮತ್ತು ಟಿಕೆಟ್ ನಿರಾಕರಿಸಿದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಬೆದರಿಕೆ ಹಾಕಿದ್ದಾರೆ.ಇತ್ತೀಚೆಗಷ್ಟೇ ಅವರು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿರುವಂತೆ ಕಾಣುತ್ತಿದ್ದು, ರಾಜಕೀಯ ವಲಯಗಳ ಕಣ್ಣಿಗೆ ಬಿದ್ದಿದ್ದು, ಕೆಲವರು ಕಾಂಗ್ರೆಸ್ ಸೇರಬಹುದು ಅಂದುಕೊಂಡಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಪಕ್ಷಗಳು ಅಧಿಕಾರದಲ್ಲಿರುವುದರಿಂದ ಕಾಂಗ್ರೆಸ್ ಮತ್ತು ಎನ್‌ಡಿಎ ನಡುವೆ ತೀವ್ರ ಪೈಪೋಟಿ ಕಂಡುಬರಲಿದೆ. ಯೋಗೇಶ್ವರ್ ಯಾವುದಾದರೊಂದು ಪಕ್ಷದ ಅಭ್ಯರ್ಥಿಯಾದರೆ ಮಾತ್ರ ತೀವ್ರ ಪೈಪೋಟಿ ನೀಡಬಲ್ಲರು ಎಂದು ವಿಶ್ಲೇಷಕರು ಸಲಹೆ ನೀಡಿದ್ದಾರೆ.ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವಿ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಈಗ ಹಾವೇರಿಯಿಂದ ಬಿಜೆಪಿ ಸಂಸದರಾಗಿದ್ದಾರೆ. ತಂದೆ ಪರ ಪ್ರಚಾರ ನಡೆಸಿರುವ ಅವರ ಪುತ್ರ ಭರತ್ ಶಿಗ್ಗಾಂವಿಯಿಂದ ಬಿಜೆಪಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಬೊಮ್ಮಾಯಿ ಬೆಂಬಲಿಸಲು ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಶ್ರೀಕಾಂತ್ ದುಂಡಿಗೌಡ ಕೂಡ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.ಕಾಂಗ್ರೆಸ್ ನಲ್ಲಿ ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಂಜೀವ್ ನೀರಲಗಿ, ಮಾಜಿ ಸಚಿವ ಆರ್. ಶಂಕರ್, ಯಾಸೀರ್ ಖಾನ್ ಪಠಾಣ್, ಸೈಯದ್ ಅಜೀಂಪೀರ್ ಖಾದ್ರಿ ಸೇರಿದಂತೆ ಹತ್ತಕ್ಕೂ ಹೆಚ್ಚು ಮುಖಂಡರು ಸ್ಪರ್ಧಿಸುವ ಗುರಿ ಹೊಂದಿದ್ದು, ತೀವ್ರ ಪೈಪೋಟಿ ಏರ್ಪಟ್ಟಿದೆ.ಬಳ್ಳಾರಿ ಸಂಸದರಾಗಿದ್ದ ಕಾಂಗ್ರೆಸ್ ಮುಖಂಡ ಇ ತುಕಾರಾಂ, ತನ್ನ ಮಗಳು ಸೌಪರ್ಣಿಕಾಗೆ ವಿಧಾನಸಭೆ ಸ್ಥಾನ ನೀಡಬೇಕೆಂಬ ಷರತ್ತಿನೊಂದಿಗೆ ಸಂಸತ್ ಚುನಾವಣೆಗೆ ಸ್ಪರ್ಧಿಸಲು ಒಪ್ಪಿಕೊಂಡಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಹಗರಣದಲ್ಲಿ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ, ಪಕ್ಷದ ಹೈಕಮಾಂಡ್ ಅವರಿಗೆ ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ ನೀಡುವ ಭರವಸೆ ನೀಡಿದರೆ ತುಕಾರಾಂ ಅವರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು. ಒಂದು ವೇಳೆ ಪರಿಸ್ಥಿತಿ ಬದಲಾದರೆ ಸೌಪರ್ಣಿಕಾ ಸಂಡೂರು ಅಥವಾ ಬಳ್ಳಾರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ಹೇಳಿವೆ. ಇನ್ನೂ 2023ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಹಿರಿಯ ಎಸ್‌ಟಿ ನಾಯಕ ಬಿ ಶ್ರೀರಾಮುಲು ಉಪ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿ ಆಗಬಹುದು ಎನ್ನಲಾಗುತ್ತಿದೆ.