ದೆಹಲಿ ಅಬಕಾರಿ ನೀತಿ ಹಗರಣ: ಮನೀಷ್ ಸಿಸೋಡಿಯಾಗೆ ಸುಪ್ರೀಂ ಕೋರ್ಟ್ ಜಾಮೀನು ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಎಎಪಿ ನಾಯಕ ಮನೀಶ್ ಸಿಸೋಡಿಯಾಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಸಿ.ಬಿ.ಐ ದಾಖಲಿಸಿಕೊಂಡಿರುವ ಪ್ರಕರಣಗಳಲ್ಲಿ ಜಾಮೀನು ಮಂಜೂರು ಮಾಡಿ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಹಾಗೂ ಕೆ.ವಿ ವಿಶ್ವನಾಥನ್ ಅವರಿದ್ಧ ಪೀಠ ಆದೇಶಿಸಿದೆ. ‘ಮೇಲ್ಮನವಿಯನ್ನು ಪರಿಗಣಿಸಲಾಗಿದೆ. ದೆಹಲಿ ಹೈಕೋರ್ಟ್‌ನ ತೀರ್ಪನ್ನು ರದ್ದು ಮಾಡಲಾಗಿದೆ. ಅವರಿಗೆ (ಸಿಸೋಡಿಯಾ) ಇ.ಡಿ ಹಾಗೂ ಸಿ.ಬಿ.ಐ ಪ್ರಕರಣಗಳಲ್ಲಿ ಜಾಮೀನು ನೀಡಲಾಗಿದೆ’ ಎಂದು ಕೋರ್ಟ್‌ ಆದೇಶಿಸಿದೆ. ₹ 2 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್‌ ನೀಡಬೇಕು ಎನ್ನುವ ಷರತ್ತು ವಿಧಿಸಲಾಗಿದೆ. ಪೊಲೀಸ್ ಠಾಣೆಗೆ ಪಾಸ್‌ಪೋರ್ಟ್‌ ಒಪ್ಪಿಸಬೇಕು ಹಾಗೂ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎನ್ನುವ ನಿಬಂಧನೆಗಳನ್ನೂ ವಿಧಿಸಲಾಗಿದೆ. ವಿಚಾರಣೆಯಲ್ಲಿ ವಿಳಂಬವಾಗಿದ್ದು, ತ್ವರಿತ ವಿಚಾರಣೆಯ ಹಕ್ಕನ್ನು ನಿರಾಕರಿಸಿದಂತೆ. ವಿಚಾರಣೆ ಮುಗಿಯುವವರೆಗೂ ಅವರನ್ನು ಕಂಬಿಯ ಹಿಂದೆ ಬಂಧನದಲ್ಲಿಡುವುದು ಸಂವಿಧಾನದ 21ನೇ ವಿಧಿಯನ್ನು ಉಲ್ಲಂಘಿಸಿದಂತೆ ಎಂದು ಪೀಠ ಅಭಿಪ್ರಾಯಪಟ್ಟಿತು. (ಏಜೆನ್ಸಿ ಮಾಹಿತಿ ಆಧರಿಸಿದ ಸುದ್ದಿ) ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.