ದೆಹಲಿ: ₹20 ಲಕ್ಷ ಲಂಚ ಪಡೆಯುತ್ತಿದ್ದ ಇ.ಡಿ ಅಧಿಕಾರಿಯನ್ನು ಬಂಧಿಸಿದ ಸಿಬಿಐ ನವದೆಹಲಿ: ₹20 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಜಾರಿ ನಿರ್ದೇಶನಾಲಯದ(ಇ.ಡಿ) ಸಹಾಯಕ ನಿರ್ದೇಶಕರೊಬ್ಬರನ್ನು ದೆಹಲಿಯಲ್ಲಿ ಕೇಂದ್ರೀಯ ತನಿಖಾ ದಳದ(ಸಿಬಿಐ) ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಇ.ಡಿ ಅಧಿಕಾರಿಯನ್ನು ಸಂದೀಪ್ ಯಾದವ್ ಎಂದು ಗುರುತಿಸಲಾಗಿದೆ. ಜ್ಯುವೆಲ್ಲರಿ ಮಾಲೀಕರೊಬ್ಬರಿಂದ ಲಂಚ ಪಡೆಯುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ. ಇ.ಡಿಯು ಜ್ಯುವೆಲ್ಲರಿ ಮಾಲೀಕನ ಮಗನ ವಿರುದ್ಧ ದಾಖಲಿಸಿರುವ ಪ್ರಕರಣವೊಂದರಿಂದ ಅವರಿಗೆ ರಿಲೀಫ್ ನೀಡಲು ಅಧಿಕಾರಿ ಲಂಚದ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ದೂರು ಬಂದಿದ್ದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಸಿಬಿಐ, ರೆಡ್ ಹ್ಯಾಂಡಾಗಿ ಅಧಿಕಾರಿಯನ್ನು ಬಂಧಿಸಿದೆ. 2023ರ ಆಗಸ್ಟ್‌ನಲ್ಲಿ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉದ್ಯಮಿ ಅಮನ್ ಧಲ್ ಅವರನ್ನು ಪಾರು ಮಾಡಲು ₹5 ಕೋಟಿ ಲಂಚ ಪಡೆದಿದ್ದ ಆರೋಪದ ಮೇಲೆ ಇ.ಡಿಯ ಸಹಾಯಕ ನಿರ್ದೇಶಕ ಸೇರಿ 6 ಅಧಿಕಾರಿಗಳನ್ನು ಸಿಬಿಐ ಬಂಧಿಸಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.