ಅತ್ಯಾಚಾರ ಪ್ರಕರಣ | ದೂರು ಹಿಂಪಡೆಯುವಂತೆ ಸಂತ್ರಸ್ತೆಯ ತಾಯಿಗೆ ಒತ್ತಡ: ಆರೋಪ ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳಲು ಕೆಲವರು ನನಗೆ ಒತ್ತಡ ಹಾಕುತ್ತಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಅಳಲು ತೊಡಿಕೊಂಡಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಜ್ಯ ಘಟಕದ ಅಧ್ಯಕ್ಷ ವಿಶ್ವನಾಥ್ ಪಾಲ್ ತಿಳಿಸಿದ್ದಾರೆ. ‘ಬಿಎಸ್‌ಪಿಯ ನಿಯೋಗವು ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಿತ್ತು. ಇದೇ ವೇಳೆ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳುವಂತೆ ಕೆಲವರು ಒತ್ತಡ ಹಾಕುತ್ತಿದ್ದಾರೆ ಎಂದು ಬಾಲಕಿಯ ತಾಯಿ ನಮಗೆ ತಿಳಿಸಿದರು. ನಾವು ಕುಟುಂಬಸ್ಥರಿಗೆ ನ್ಯಾಯ ಒದಗಿಸುವ ಭರವಸೆ ನೀಡಿದ್ದೇವೆ. ಯಾರೇ ಒತ್ತಡ ಅಥವಾ ಬೆದರಿಕೆ ಹಾಕಿದರೂ ಹೆದರದಂತೆ ಧೈರ್ಯ ತುಂಬಿದ್ದೇವೆ’ ಎಂದು ವಿಶ್ವನಾಥ್ ಹೇಳಿದ್ದಾರೆ. ಎರಡು ತಿಂಗಳಿಗೂ ಹೆಚ್ಚು ಕಾಲ ಸಂತ್ರಸ್ತೆಯ ದೂರನ್ನು ಅಧಿಕಾರಿಗಳು ಸ್ವೀಕರಿಸದೆ ನಿರ್ಲಕ್ಷ್ಯ ತೋರಿದ್ದರು. ಇತರೆ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರು ಒತ್ತಡ ಹೇರಿದ ಬಳಿಕ ಆರೋಪಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವಿಶ್ವನಾಥ್ ವಿವರಿಸಿದ್ದಾರೆ. ಮೊಯಿದ್ ಖಾನ್ ಮತ್ತು ಆತನ ಸಹಚರ ರಾಜು ಖಾನ್ ಎಂಬುವವರು ಎರಡು ತಿಂಗಳ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ವಿಡಿಯೊ ಚಿತ್ರೀಕರಣ ಮಾಡಿಕೊಂಡಿದ್ದರು. ವೈದ್ಯಕೀಯ ತಪಾಸಣೆ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಯಿದ್ ಖಾನ್ ಸಮಾಜವಾದಿ ಪಕ್ಷದ ಸದಸ್ಯರಾಗಿದ್ದು, ಫೈಜಾಬಾದ್ ಸಂಸದ ಅವಧೇಶ್ ಪ್ರಸಾದ್ ಅವರೊಂದಿಗೆ ಗುರುತಿಸಿಕೊಂಡಿದ್ದಾನೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಜುಲೈ 30ರಂದು ಅಯೋಧ್ಯೆಯ ಪುರ ಕಲಂದರ್ ಪ್ರದೇಶದಲ್ಲಿ ಮೊಯಿದ್ ಖಾನ್ ಮತ್ತು ರಾಜು ಖಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ ಆದೇಶದ ಮೇರೆಗೆ ಅಯೋಧ್ಯೆ ಜಿಲ್ಲಾಡಳಿತವು ಅಕ್ರಮವಾಗಿ ನಿರ್ಮಿಸಿದ್ದ ಮೊಯಿದ್ ಖಾನ್ ಮಾಲೀಕತ್ವದ ಬೇಕರಿಯನ್ನು ನೆಲಸಮಗೊಳಿಸಿದೆ ಎಂದು ವರದಿಯಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.