ಹರಿಯಾಣ|ಡಿಜೆ ವಿಚಾರಕ್ಕೆ ಕಾವಡ್‌ ಯಾತ್ರಾರ್ಥಿಗಳ ನಡುವೆ ಘರ್ಷಣೆ: ಆರು ಮಂದಿಗೆ ಗಾಯ ಗುರುಗ್ರಾಮ: ಹರಿಯಾಣದ ಗುರುಗ್ರಾಮ ಜಿಲ್ಲೆಯ ಪ್ರೇಮ್‌ನಗರದಲ್ಲಿ ಕಾವಡ್‌ ಯಾತ್ರಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಡಿಜೆ ವಿಚಾರವಾಗಿ ಎರಡು ಗುಂಪುಗಳ ನಡವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಘರ್ಷಣೆಗೆ ಕಾರಣವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಶುಕ್ರವಾರ ಒಂದು ಗುಂಪಿನವರು ದೇವಸ್ಥಾನದ ಬಳಿ ಸ್ವಚ್ಛತಾ ಕಾರ್ಯ ಮುಗಿಸಿ ವಾಪಸ್‌ ಹೋಗುತ್ತಿದ್ದ ವೇಳೆ ಮತ್ತೊಂದು ಗುಂಪಿನವರು ದಾಳಿ ನಡೆಸಿದ್ದಾರೆ. ಈ ವೇಳೆ ಕಲ್ಲು ತೂರಾಟವಾಗಿದ್ದು, ಕೆಲವರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿದ್ದೇವೆ. ಆರೋಪಿಗಳನ್ನು ಪತ್ತೆ ಹಚ್ಚಲಾಗಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದು ಸಹಾಯಕ ಪೊಲೀಸ್ ಆಯುಕ್ತ ಸುರೇಂದರ್ ಫೋಗಟ್ ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.