ಸೇತುವೆ ಕುಸಿತ: ಬಿಹಾರ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್ ನವದೆಹಲಿ: ಬಿಹಾರದಲ್ಲಿರುವ ಸೇತುವೆಗಳ ಸುರಕ್ಷತೆ ಮತ್ತು ಬಾಳಿಕೆಗೆ ಸಂಬಂಧಿಸಿ ಕಳವಳ ವ್ಯಕ್ತಪಡಿಸಿ ಸಲ್ಲಿಕೆಯಾದ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಬಿಹಾರ ಸರ್ಕಾರ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಸೇರಿದಂತೆ ಇತರರಿಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ. ರಾಜ್ಯದಲ್ಲಿ ಕಳೆದ ಕೆಲ ವಾರಗಳಲ್ಲಿ ಹಲವು ಸೇತುವೆಗಳು ಕುಸಿದ ಬೆನ್ನಲ್ಲೇ ಅರ್ಜಿ ಸಲ್ಲಿಕೆಯಾಗಿತ್ತು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಮತ್ತು ಮನೋಜ್‌ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠವು, ರಾಜ್ಯ ಸರ್ಕಾರ ಮತ್ತು ಇತರರಿಗೆ ನೋಟಿಸ್‌ ಜಾರಿ ಮಾಡಿದೆ. ರಸ್ತೆ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬಿಹಾರ ರಾಜ್ಯ ಸೇತುವೆ ನಿರ್ಮಾಣ ಲಿಮಿಟೆಡ್‌ ಅಧ್ಯಕ್ಷ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಗೂ ನೋಟಿಸ್‌ ರವಾನಿಸಿದೆ. ಕಳೆದ ನಾಲ್ಕು ವಾರಗಳಲ್ಲಿ ಬಿಹಾರದ ವಿವಿಧೆಡೆ 10 ಸೇತುವೆ ಕುಸಿತ ಪ್ರಕರಣಗಳು ವರದಿಯಾಗಿವೆ. ತೀವ್ರ ಮಳೆಯೇ ಕುಸಿತಕ್ಕೆ ಕಾರಣ ಎಂದು ಹೇಳಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.