ದೆಹಲಿ ಕೋಚಿಂಗ್ ಸೆಂಟರ್‌ ದುರಂತ |ಸೂಕ್ತ ಕ್ರಮ ಕೈಗೊಳ್ಳಲಾಗುವುದು: ವಿ.ಕೆ.ಸಕ್ಸೇನಾ ನವದೆಹಲಿ: ಇಲ್ಲಿನ ಕೋಚಿಂಗ್‌ ಸೆಂಟರ್‌ನ ನೆಲಮಹಡಿಗೆ ಮಳೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮಂಗಳವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ದುರಂತ ಘಟನೆಯಾಗಿದೆ. ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದರೆ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದಾರೆ. ಓಲ್ಡ್‌ ರಾಜೇಂದ್ರ ನಗರದಲ್ಲಿರುವ ‘ರಾವ್ಸ್ ಐಎಎಸ್‌ ಸ್ಟಡಿ ಸರ್ಕಲ್‌’ ಕಟ್ಟಡದ ನೆಲಮಹಡಿಗೆ ನೀರು ನುಗ್ಗಿ ಮೂವರು ವಿಧ್ಯಾರ್ಥಿಗಳು ಮೃತಪಟ್ಟಿದ್ದರು. ಶನಿವಾರ ನಡೆದ ದುರ್ಘಟನೆಯಲ್ಲಿ ಮೃತಪಟ್ಟವರನ್ನು ಕೇರಳದ ಎರ್ನಾಕುಳಂ ಜಿಲ್ಲೆಯ ನವೀನ್‌ ಡೆಲ್ವಿನ್ (29), ತೆಲಂಗಾಣದಲ್ಲಿ ನೆಲೆಸಿರುವ ಬಿಹಾರದ ಔರಂಗಾಬಾದ್‌ನ ತಾನ್ಯಾ ಸೋನಿ (21) ಮತ್ತು ಉತ್ತರ ಪ್ರದೇಶದ ಶ್ರೇಯಾ ಯಾದವ್‌ ಎಂದು ಗುರುತಿಸಲಾಗಿದೆ. ಈ ಮೂವರೂ ನಾಗರಿಕ ಸೇವಾ ಪರೀಕ್ಷೆಗಾಗಿ ಸಿದ್ಧತೆ ನಡೆಸುತ್ತಿದ್ದರು. ಘಟನೆಯ ಕುರಿತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಸೋಮವಾರ ಓಲ್ಡ್‌ ರಾಜೇಂದ್ರ ನಗರದ ಕೋಚಿಂಗ್ ಸೆಂಟರ್‌ಗೆ ಭೇಟಿ ನೀಡಿದ್ದ ಸಕ್ಸೇನಾ ಅವರು, ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದರು. ಮೃತ ಮೂವರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ ₹ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.