ಹಿಮಾಚಲ ಪ್ರದೇಶ | ಮೇಘಸ್ಫೋಟ: ಕೊಚ್ಚಿ ಹೋದ ಕಾಲು ಸೇತುವೆ, ಶೆಡ್‌ಗಳು ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ತೋಷ್‌ ನಲ್ಲಾಹ್‌ನಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಉಂಟಾದ ಹಠಾತ್‌ ಪ್ರವಾಹದಲ್ಲಿ ಮದ್ಯದಂಗಡಿ ಸೇರಿದಂತೆ ಮೂರು ತಾತ್ಕಾಲಿಕ ಶೆಡ್‌ಗಳು ಹಾಗೂ ಕಾಲು ಸೇತುವೆ ಕೊಚ್ಚಿಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು (ಮಂಗಳವಾರ) ಮುಂಜಾನೆ ಮಣಿಕರಣ್‌ನ ತೋಷ್‌ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಸ್ಥಳಕ್ಕೆ ರಕ್ಷಣಾ ತಂಡದ ಸಿಬ್ಬಂದಿ ಧಾವಿಸಿದ್ದಾರೆ ಎಂದು ಜಿಲ್ಲಾಧಿಕಾರಿ ತೋರುಲ್‌ ಎಸ್‌. ರವೀಶ್‌ ಹೇಳಿದ್ದಾರೆ. ‘ನದಿ ತೀರ ಪ್ರದೇಶಗಳಿಂದ ದೂರವಿರುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಮಳೆಗಾಲದಲ್ಲಿ ಕಟ್ಟಡ ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ತಿಳಿಸಿದ್ದಾರೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ ಏಳು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸ್ಥಳೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಜಿಲ್ಲೆಗಳಿಗೆ ‘ಆರೆಂಜ್‌’ ಅಲರ್ಟ್‌ ಘೋಷಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.