| ಮಮತಾ ಅವರನ್ನು ನಡೆಸಿಕೊಂಡ ರೀತಿ ಸ್ವೀಕಾರಾರ್ಹವಲ್ಲ: ಕಾಂಗ್ರೆಸ್‌ ನವದೆಹಲಿ: ನೀತಿ ಆಯೋಗದ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ನಡೆಸಿಕೊಂಡ ರೀತಿ ಸ್ವೀಕಾರಾರ್ಹವಲ್ಲ ಎಂದು ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಕಿಡಿಕಾರಿದ್ದಾರೆ. ನೀತಿ ಆಯೋಗದ 9ನೇ ಆಡಳಿತ ಮಂಡಳಿಯ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರ ಭಾಷಣವನ್ನು ಅನ್ಯಾಯವಾಗಿ ನಿಲ್ಲಿಸಲಾಗಿದೆ. ಹೀಗಾಗಿ ಮಮತಾ ಅವರು ಸಭೆಯಿಂದ ಹೊರ ನಡೆದಿದ್ದಾರೆ ಎಂದು ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿವೆ. 10 ವರ್ಷಗಳ ಹಿಂದೆ ಸ್ಥಾಪಿಸಲಾಗಿರುವ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿಕೊಂಡಿರುವ ಪ್ರಧಾನ ಮಂತ್ರಿ ಮೋದಿ ಅವರ ಕನಸಿನಂತೆಯೇ ಈ ಸಭೆ ಕಾರ್ಯನಿರ್ವಹಿಸುತ್ತದೆ. ಈ ಆಯೋಗವು ಪಕ್ಷಪಾತದಿಂದ ಕೂಡಿದೆ ಮತ್ತು ವೃತ್ತಿಪರತೆಯಿಂದ ಮುಕ್ತವಾಗಿದೆ. ಸಭೆಯಲ್ಲಿ ರಾಜ್ಯಗಳ ನಡುವೆ ಸಮನ್ವಯತೆ ಸಾಧಿಸುವ ಪ್ರಯತ್ನಗಳು ನಡೆದಿಲ್ಲ ಎಂದು ರಮೇಶ್ ಆರೋಪಿಸಿದ್ದಾರೆ. ನೀತಿ ಆಯೋಗದ ಸಭೆಯಲ್ಲಿ ನನ್ನನ್ನು ಕೇವಲ ಐದು ನಿಮಿಷ ಮಾತನಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿ ಮಮತಾ ಬ್ಯಾನರ್ಜಿ ಅವರು ಸಭೆಯಿಂದ ಹೊರನಡೆದಿದ್ದಾರೆ ಎನ್‌ಡಿಎ ಮೈತ್ರಿಕೂಟವಲ್ಲದ ರಾಜ್ಯಗಳಿಗೆ ಕೇಂದ್ರ ಬಜೆಟ್‌ನಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಪಕ್ಷದ ಮುಖ್ಯಮಂತ್ರಿಗಳು ಸಭೆಯನ್ನು ಬಹಿಷ್ಕರಿಸಿದ್ದಾರೆ. ‘ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾತನಾಡುವ ವೇಳೆ ಮೈಕ್ ಸ್ವಿಚ್ ಆಫ್ ಮಾಡಲಾಗಿತ್ತು ಎಂದು ಹೇಳಿರುವುದು ದುರದೃಷ್ಟಕರ, ಇದು ಸತ್ಯಕ್ಕೆ ದೂರವಾದದ್ದು’ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.