<.... (="0a3e239a54e658d4ec5f01f7116396d2", =".CA8E4F893CD029437B2A7F0DFF543F00..DEDB3FF113A40B02B1D0E5A76E791E0B..31691")> ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ 16 ಮಂದಿ ಮೃತಪಟ್ಟಿದ್ದಾರೆ. ಕೆಲವರು ನಾಪತ್ತೆಯಾಗಿದ್ದಾರೆ. ತೆಲಂಗಾಣದ ಹಲವೆಡೆ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದ್ದು, ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಕೇಂದ್ರವನ್ನು ಒತ್ತಾಯಿಸಲು ಮುಖ್ಯಮಂತ್ರಿ ರೇವಂತ್ ರೆಡ್ಡಿ ನಿರ್ಧರಿಸಿದ್ದಾರೆ. : 3.98% . . . . ಈ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ ಐಟಿ ಮತ್ತು ಕೈಗಾರಿಕೆ ಸಚಿವ ಡಿ. ಶ್ರೀಧರ್ ಬಾಬು, ಹಾನಿ ಕುರಿತಂತೆ ವರದಿ ಬಂದ ಬಳಿಕ ತಿಳಿದುಬರಲಿದೆ ಎಂದು ತಿಳಿಸಿದರು. ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ ಸಿಎಂ ರೇವಂತ್ ರೆಡ್ಡಿ, ಮಳೆ ಸಂಬಂಧಿತ ಅವಘಡಗಳಲ್ಲಿ ಮೃತರ ಸಂಬಂಧಿಕರಿಗೆ ತಲಾ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. ಅಲ್ಲದೆ, ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತಂತೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ವರದಿ ಸಲ್ಲಿಸಲಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಾಗುವುದು. ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಮನವಿ ಮಾಡಲಾಗುವುದು ಎಂದೂ ಅದು ತಿಳಿಸಿದೆ. ಹಾನಿ ಅನುಭವಿಸಿದ ಸಾರ್ವಜನಿಕರಿಗೆ ಶೀಘ್ರವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿಯೂ ಅದು ಹೇಳಿದೆ. ದನಕರುಗಳು, ಮೇಕೆ ಮತ್ತು ಕುರಿಗಳನ್ನು ಕಳೆದುಕೊಂಡ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಅಲ್ಲದೆ, ಅಧಿಕ ಮಳೆ ಬೀಳುವ ಸಾಧ್ಯತೆ ಇರುವ ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಿಸುವಂತೆ ಮತ್ತು ಕಾಲ್ ಸೆಂಟರ್‌ಗಳನ್ನು ತೆರೆಯುವಂತೆ ಡಿ.ಸಿಗಳಿಗೆ ಸಿಎಂ ಸೂಚಿಸಿದ್ದಾರೆ. ಪ್ರವಾಹ ಪೀಡಿತ ಕಮ್ಮಮ್, ಕೊಥಗುಡೆಮ್, ಮೆಹಬೂಬಾಬಾದ್ ಮತ್ತು ಸೂರ್ಯಪೇಟೆಗಳಿಗೆ ತಕ್ಷಣದ ಪರಿಹಾರ ಕಾರ್ಯಗಳಿಗೆ ₹5 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.