ಐಎನ್‌ಎಸ್‌ ಬ್ರಹ್ಮಪುತ್ರ ನೌಕೆಯಲ್ಲಿ ಬೆಂಕಿ ಮುಂಬೈ: ಭಾರತೀಯ ನೌಕಾಪಡೆಯ ಯುದ್ಧ ನೌಕೆಗಳಲ್ಲಿ ಒಂದಾಗಿರುವ ಐಎನ್‌ಎಸ್‌ ಬ್ರಹ್ಮಪುತ್ರದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ. ಇದರಿಂದ ನೌಕೆಗೆ ಸಾಕಷ್ಟು ಹಾನಿ ಉಂಟಾಗಿದ್ದು, ಒಂದು ಕಡೆಗೆ ವಾಲಿದೆ ಎಂದು ನೌಕಾಪಡೆಯ ಮೂಲಗಳು ತಿಳಿಸಿವೆ. ಮುಂಬೈನಲ್ಲಿರುವ ನೌಕಾಪಡೆಯ ಡಾಕ್‌ಯಾರ್ಡ್‌ನಲ್ಲಿ ದುರಸ್ತಿಗಾಗಿ ನಿಲ್ಲಿಸಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ನೌಕೆಯ ಒಬ್ಬ ಸಿಬ್ಬಂದಿ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಶೋಧ ಕಾರ್ಯ ಕೈಗೊಳ್ಳಲಾಗಿದೆ. ‘ಜುಲೈ 21ರ ಸಂಜೆ ನೌಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಡಾಕ್‌ಯಾರ್ಡ್‌ನ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಇತರ ಹಡಗುಗಳ ಸಿಬ್ಬಂದಿ ನೆರವಿನಿಂದ ಸೋಮವಾರ (ಜುಲೈ 22) ಬೆಳಿಗ್ಗೆ ಬೆಂಕಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲಾಯಿತು. ಸೋಮವಾರ ಮಧ್ಯಾಹ್ನದ ವೇಳೆಗೆ ನೌಕೆ ಒಂದು ಭಾಗಕ್ಕೆ ವಾಲತೊಡಗಿತು. ಎಲ್ಲ ಪ್ರಯತ್ನಗಳ ಹೊರತಾಗಿಯೂ ಹಡಗನ್ನು ನೇರವಾಗಿಸಲು ಸಾಧ್ಯವಾಗಲಿಲ್ಲ’ ಎಂದು ನೌಕಾಪಡೆಯ ಪ್ರಕಟಣೆ ತಿಳಿಸಿದೆ. ಇದು ದಶಕದ ಅವಧಿಯಲ್ಲಿ ಭಾರತೀಯ ನೌಕಾಪಡೆಯಲ್ಲಿ ಸಂಭವಿಸಿದ ಅತ್ಯಂತ ದೊಡ್ಡ ದುರಂತಗಳಲ್ಲಿ ಒಂದಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.