ಉತ್ತರ ಪ್ರದೇಶ: ಪ್ರವಾಹಕ್ಕೆ ಸಿಲುಕಿದ 100 ಜನರ ರಕ್ಷಣೆ ಬಹ್ರೈಚ್: ಉತ್ತರ ಪ್ರದೇಶದ ಘಾಘ್ರಾ ನದಿಯಲ್ಲಿ ಪ್ರವಾಹ ಉಂಟಾದ ಹಿನ್ನಲೆ ನೇಪಾಳಕ್ಕೆ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ ನಂತರ ನೇಪಾಳದ 100ಕ್ಕೂ ಹೆಚ್ಚು ಗ್ರಾಮಸ್ಥರು ಪ್ರವಾಹಕ್ಕೆ ಸಿಲುಕಿದ್ದಾರೆ. ನಂತರ ಅವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಭಾರತ-ನೇಪಾಳ ಗಡಿಗೆ ಸಮೀಪವಿರುವ ಚಹಲ್ವಾ ಗ್ರಾಮದ 115 ನಿವಾಸಿಗಳು ಶುಕ್ರವಾರ, ನೀರಿನ ಮಟ್ಟ ಕಡಿಮೆ ಇದ್ದ ಕಾರಣ ನದಿ (ಘಾಘ್ರಾ ನದಿಯ ಮತ್ತೊಂದು ಭಾಗ) ದಾಟಿ ಹೊಲಗಳಿಗೆ ಹೋಗಿದ್ದರು. ಸಂಜೆ 6 ಗಂಟೆ ಸುಮಾರಿಗೆ ನೇಪಾಳದಿಂದ ಅಧಿಕ ಪ್ರಮಾಣದ ನೀರು ಬಿಟ್ಟಿದ್ದರಿಂದ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಗ್ರಾಮಸ್ಥರು ಪರದಾಡುವಂತಾಯಿತು ಎಂದು ಶನಿವಾರ ಉತ್ತರ ಪ್ರದೇಶದ ಪರಿಹಾರ ಆಯುಕ್ತರ ಕಚೇರಿಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ನದಿ ಉಕ್ಕಿ ಹರಿಯುತ್ತಿದ್ದಂತೆ 63 ಜನರು ದೋಣಿಗಳ ಮೂಲಕ ಸುರಕ್ಷಿತವಾಗಿ‌‌‌‌‌‌‌‌‌‌‌‌‌‌ ಬಂದಿದ್ದು, ಉಳಿದ ಗ್ರಾಮಸ್ಥರು ಹೊಲಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅದು ಹೇಳಿದೆ. ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ), ಪ್ರಾಂತೀಯ ಸಶಸ್ತ್ರ ಪೊಲೀಸ್ (ಪಿಎಸಿ) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಕರೆತರಲಾಯಿತು ಎಂದು ಹೇಳಿಕೆ ತಿಳಿಸಿದೆ. ಗ್ರಾಮಸ್ಥರಿಗೆ ಆಹಾರ ವಿತರಿಸಲಾಗಿದ್ದು, ಆರೋಗ್ಯ ತಪಾಸಣೆಗಾಗಿ ವೈದ್ಯಕೀಯ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿ, ತಹಶೀಲ್ದಾರ್ ಮತ್ತು ಪೊಲೀಸರು ಮತ್ತು ನೀರಾವರಿ ಸೇರಿದಂತೆ ಇತರ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಪರಿಸ್ಥಿತಿ ಸಹಜವಾಗುವವರೆಗೆ ಸ್ಥಳದಲ್ಲೇ ಇರುವಂತೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.