ಒಬಿಸಿ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಡುವ ಕಾಂಗ್ರೆಸ್‌: ಅಮಿತ್‌ ಶಾ ಆರೋಪ ಮಹೇಂದ್ರಗಢ: ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳಿಗೆ ಇದ್ದು ಮೀಸಲಾತಿಯನ್ನು ಕಸಿದುಕೊಂಡು ಕಾಂಗ್ರೆಸ್‌ ಮುಸ್ಲಿಮರಿಗೆ ನೀಡಿತು. ಅವರು ಇಲ್ಲಿ ಅಧಿಕಾರಕ್ಕೆ ಬಂದರೆ ಅದನ್ನೆ ಮಾಡುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು. ಇಲ್ಲಿ ನಡೆದ ಹಿಂದುಳಿದ ವರ್ಗಗಳ ಸಮ್ಮೇಳನದಲ್ಲಿ ಅಮಿತ್‌ ಶಾ ಭಾಗವಹಿಸಿ ಮಾತನಾಡಿದರು. 1950ರ ದಶಕದಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ನೀಡಲು ರಚಿಸಲಾದ ಕಾಕ ಕಾಲೇಕರ್ ಆಯೋಗದ ವರದಿಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಇದರ ಶಿಫಾರಸುಗಳನ್ನು ಕಾಂಗ್ರೆಸ್‌ ಅಧಿಕಾರದಲ್ಲಿ ಇದ್ದಾಗ ಹಲವು ವರ್ಷಗಳ ಕಾಲ ಜಾರಿಗೆ ತರಲಿಲ್ಲ ಎಂದು ಹೇಳಿದರು. 1980ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಹಿಂದುಳಿದ ವರ್ಗಗಳಿಗೆ ಅನುಕೂಲ ಕಲ್ಪಿಸುವ ಮಂಡಲ್ ಆಯೋಗವನ್ನು ಕೋಲ್ಡ್ ಸ್ಟೋರೇಜ್ ನಲ್ಲಿಟ್ಟರು. 1990ರಲ್ಲಿ ಮಂಡಲ್‌ ಆಯೋಗವನ್ನು ಅಂಗೀಕರಿಸಿದಾಗ ಆಗಿನ ಪ್ರಧಾನಿ ರಾಜೀವ್ ಗಾಂಧಿ ಎರಡೂವರೆ ಗಂಟೆಗಳ ಭಾಷಣ ಮಾಡಿದರೆ ವಿನಾ ಒಬಿಸಿ ಮೀಸಲಾತಿಯನ್ನು ವಿರೋಧಿಸಿದರು ಎಂದರು. ಹರಿಯಾಣದಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಇಲ್ಲಿ ನಾವು ಮುಸ್ಲಿಂ ಮೀಸಲಾತಿಗೆ ಅವಕಾಶ ನೀಡುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಹೇಳಿದರು. ಮುಖ್ಯಮಂತ್ರಿ ಸೈನಿ ನೇತೃತ್ವದ ಸರ್ಕಾರ ಇತ್ತೀಚೆಗೆ ಒಬಿಸಿಗಳ ವಾರ್ಷಿಕ ಆದಾಯ ಮಿತಿಯನ್ನು ₹6 ಲಕ್ಷದಿಂದ ₹8 ಲಕ್ಷಕ್ಕೆ ಹೆಚ್ಚಿಸಿದೆ. ಕೇಂದ್ರ ಸರ್ಕಾರದ ನೀತಿಗೆ ಅನುಗುಣವಾಗಿ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಪ್ರಸ್ತುತ ಇರುವ ಶೇ 15ರಷ್ಟು ಮೀಸಲಾತಿಯನ್ನು ಶೇ.27ಕ್ಕೆ ಹೆಚ್ಚಿಸಲಾಗುವುದು ಎಂದು ಶಾ ಹೇಳಿದರು. ಈ ವರ್ಷದ ಕೊನೆಯಲ್ಲಿ ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.