ಅಸ್ಸಾಂನಲ್ಲಿ ಸಿಎಎ ಅಡಿ ಎಂಟು ಅರ್ಜಿ: ಹಿಮಂತ್‌ ಗುವಾಹಟಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ರಾಜ್ಯದಲ್ಲಿ ಈವರೆಗೆ ಎಂಟು ಮಂದಿ ಮಾತ್ರ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮ ಸೋಮವಾರ ಹೇಳಿದರು. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ಇಬ್ಬರು ಅರ್ಜಿದಾರರು ಮಾತ್ರ ದಾಖಲೆಗಳ ಪರಿಶೀಲನೆಗಾಗಿ ಸಂಬಂಧಿಸಿದ ಅಧಿಕಾರಿಗಳ ಎದುರು ಸಂದರ್ಶನಕ್ಕೆ ಹಾಜರಾಗಿದ್ದರು’ ಎಂದು ಹೇಳಿದರು. ‘ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವಂತೆ ಬರಾಕ್‌ ಕಣಿವೆಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದೆವು. ಅದರೆ ಹಲವು ಹಿಂದೂ ಬೆಂಗಾಲಿ ಕುಟುಂಬಗಳು ಅರ್ಜಿ ಸಲ್ಲಿಸಲು ನಿರಾಕರಿಸಿವೆ. ‘ವಿದೇಶಿಗರ ನ್ಯಾಯಾಧಿಕರಣದ ಎದುರು ತಮ್ಮ ಪ್ರಕರಣಗಳ ವಿಚಾರಣೆ ಬಾಕಿ ಇದೆ. ಹೀಗಾಗಿ ಅರ್ಜಿ ಸಲ್ಲಿಸುತ್ತಿಲ್ಲ’ ಎಂದು ಅವರು ಹೇಳಿದರು’ ಎಂದರು. ಕೇಂದ್ರ ಸರ್ಕಾರವು ಮಾರ್ಚ್‌ 11ರಂದು ಪೌರತ್ವ ತಿದ್ದುಪಡಿ ಕಾಯ್ದೆ–2019 ಅನ್ನು ಅನುಷ್ಠಾನ ಮಾಡಿದೆ. ಈ ಪ್ರಕಾರ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಡಿಸೆಂಬರ್‌ 31, 2014ಕ್ಕೂ ಮೊದಲು ಭಾರತಕ್ಕೆ ಬಂದು ನೆಲೆಸಿರುವ ಮುಸ್ಲಿಮೇತರರಿಗೆ ಪೌರತ್ವ ನೀಡಲಾಗುತ್ತದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.