ಮೊಯಿತ್ರಾ ವಿರುದ್ಧ ರದ್ದು ಕೋರಿ ಅರ್ಜಿ: ಪೊಲೀಸರ ಪ್ರತಿಕ್ರಿಯೆ ಕೇಳಿದ ಕೋರ್ಟ್ ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಅಧ್ಯಕ್ಷೆ ರೇಖಾ ಶರ್ಮಾ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಸಲ್ಲಿಸಿರುವ ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ಪೊಲೀಸರಿಗೆ ದೆಹಲಿ ಹೈಕೋರ್ಟ್ ಸೂಚಿಸಿದೆ. ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಅರ್ಜಿಯ ಕುರಿತು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದು, ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಉತ್ತರಪ್ರದೇಶದ ಹಾಥರಸ್‌ನಲ್ಲಿ ಭೀಕರ ಕಾಲ್ತುಳಿತ ಸಂಭವಿಸಿರುವ ಸ್ಥಳಕ್ಕೆ ಭೇಟಿ ನೀಡಿದ ವಿಡಿಯೊವನ್ನು ರೇಖಾ ಶರ್ಮ ಅವರು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಮಹುವಾ, ‘ರೇಖಾ ತನ್ನ ಬಾಸ್‌ನ ಪೈಜಾಮವನ್ನು ಹಿಡಿದುಕೊಳ್ಳುವಲ್ಲೇ ನಿರತರಾಗಿದ್ದರು’ ಎಂದು ಕಾಮೆಂಟ್‌ ಮಾಡಿದ್ದರು. ಬಳಿಕ ಅದನ್ನು ತೆಗೆದು ಹಾಕಿದ್ದರು. ಭಾರತೀಯ ನ್ಯಾಯ ಸಂಹಿತೆಯ 79ನೇ ಕಲಂನಡಿ ಪ್ರಕರಣ ದಾಖಲಾಗಿದ್ದು, ಹೊಸ ಕಾನೂನು ಜಾರಿಯಾದ ಬಳಿಕ ಈ ಕಾಯ್ದೆಯಡಿ ದೆಹಲಿ ಪೊಲೀಸರ ವಿಶೇಷ ಘಟಕ ದಾಖಲಿಸಿದ ಮೊದಲ ಪ್ರಕರಣವಿದು. ‘ಅಸಭ್ಯ ಮತ್ತು ಅತಿರೇಕದ ಹೇಳಿಕೆಗಳಿಂದ ಮಹಿಳೆಯ ಘನತೆಗೆ ಧಕ್ಕೆಯುಂಟು ಮಾಡಿದ ಮಹುವಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಆಯೋಗಕ್ಕೆ ಸಮಗ್ರ ವರದಿಯನ್ನು ನೀಡಬೇಕು‘ ಎಂದು ಆಯೋಗ ಸೂಚಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.