ದೆಹಲಿ ಮೆಟ್ರೊ: ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ 60 ವರ್ಷದ ವೃದ್ಧ ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮೆಟ್ರೊದ ಕೆಂಪು ಮಾರ್ಗದ ಕಾಶ್ಮೀರಿ ಗೇಟ್‌ ನಿಲ್ದಾಣದಲ್ಲಿ ಹಳಿಗೆ ಹಾರಿ 60 ವರ್ಷದ ವೃದ್ಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ದೆಹಲಿಯ ಚವರಿ ಬಜಾರ್‌ ನಿವಾಸಿ ಸುನೀಲ್‌ ಗುಪ್ತಾ ಎಂದು ಗುರುತಿಸಲಾಗಿದೆ. ಗುಪ್ತಾ ಅವರು ಕಳೆದ ಕೆಲವು ವರ್ಷಗಳಿಂದ ಕ್ಷಯರೋಗದಿಂದ ಬಳಲುತ್ತಿದ್ದು, ಈಗಾಗಲೇ ಚಿಕಿತ್ಸೆಗಾಗಿ ₹6 ಲಕ್ಷ ಖರ್ಚು ಮಾಡಿದ್ದರು ಎಂದು ಸಂತ್ರಸ್ತರ ಸಹೋದರ ತಿಳಿಸಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಹೇಳಿದ್ದಾರೆ. ‘ಕಾಶ್ಮೀರಿ ಗೇಟ್‌ ಮೆಟ್ರೊ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಹಳಿಗೆ ಹಾರಿದ್ದು, ದೆಹಲಿಯ ರಿಥಾಲಾದಿಂದ ಘಾಜಿಯಾಬಾದ್‌ನ ಶಹೀದ್ ಸ್ಥಲ್‌ಗೆ ಸಂಪರ್ಕ ಕಲ್ಪಿಸುವ ಕೆಂಪು ಮಾರ್ಗದ ಸೇವೆಯಲ್ಲಿ ವಿಳಂಬವಾಗಲಿದೆ. ಇತರ ಎಲ್ಲಾ ಮಾರ್ಗಗಳಲ್ಲಿಯೂ ಸಾಮಾನ್ಯ ಸೇವೆ ಇರಲಿದೆ’ ಎಂದು ದೆಹಲಿ ಮೆಟ್ರೊ ರೈಲು ನಿಗಮ (ಡಿಎಂಆರ್‌ಸಿ) ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ( ) . . 5 ನಿಮಿಷಗಳ ನಂತರ ಕೆಂಪು ಮಾರ್ಗದ ಸೇವೆಯು ಯಥಾಸ್ಥಿತಿಗೆ ಮರಳಿದೆ ಎಂದು ಡಿಎಂಆರ್‌ಸಿ ತಿಳಿಸಿದೆ. ಆತ್ಮಹತ್ಯೆ ಪತ್ರ ಪತ್ತೆಯಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.