ತಮಿಳುನಾಡು | ಬಿಎಸ್‌ಪಿ ಅಧ್ಯಕ್ಷನ ಹತ್ಯೆ: ಎಂಟು ಮಂದಿ ಶಂಕಿತರ ಬಂಧನ ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆಗೆ ಸಂಬಂಧಿಸಿದಂತೆ ಎಂಟು ಮಂದಿ ಶಂಕಿತರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ಶಂಕಿತರನ್ನು ಬಂಧಿಸಲಾಗಿದೆ. ಇದು ಪ್ರಾಥಮಿಕ ಹಂತದ ತನಿಖೆಯಾಗಿದೆ. ಆದ್ದರಿಂದ ಸ್ವಲ್ಪ ಸಮಯದ ಬಳಿಕ ಹೆಚ್ಚಿನ ಸತ್ಯಾಂಶ ಹೊರಬರಲಿದೆ. ನಂತರ ಪ್ರಕರಣದ ಸ್ಪಷ್ಟ ಚಿತ್ರಣ ಸಿಗಲಿದೆ’ ಎಂದು ಅವರು ತಿಳಿಸಿದ್ದಾರೆ. ಹತ್ಯೆಯ ಹಿಂದೆ ಎರಡರಿಂದ ಮೂರು ಅನುಮಾನಸ್ಪದ ಉದ್ದೇಶಗಳಿರಬಹುದು. ಆದರೆ, ಶಂಕಿತರ ವಿಚಾರಣೆ ಬಳಿಕವಷ್ಟೇ ಹತ್ಯೆ ಹಿಂದಿನ ನಿಖರ ಉದ್ದೇಶ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ. ಪ್ರಕರಣದ ತನಿಖೆಗೆ ಚೆನ್ನೈ ಪೊಲೀಸ್ 10 ವಿಶೇಷ ತಂಡ ರಚಿಸಿದೆ ಎಂದು ಹೆಚ್ಚುವರಿ ಪೊಲೀಸ್‌ ಆಯುಕ್ತರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ (55) ಅವರನ್ನು ಪೆರಂಬೂರ್‌ನಲ್ಲಿರುವ ಅವರ ನಿವಾಸದ ಸಮೀಪ ಆರು ಮಂದಿ ದುಷ್ಕರ್ಮಿಗಳ ಗುಂಪೊಂದು ಹತ್ಯೆ ಮಾಡಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.