| ಮತ್ತೆ 6 ಮಂದಿ ಸಾವು, 21 ಲಕ್ಷಕ್ಕೂ ಅಧಿಕ ಮಂದಿ ಸಂಕಷ್ಟದಲ್ಲಿ ಗುವಾಹಟಿ: ಅಸ್ಸಾಂನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಮತ್ತಷ್ಟು ತೀವ್ರಗೊಂಡಿದೆ. 29 ಜಿಲ್ಲೆಗಳಲ್ಲಿ 21 ಲಕ್ಷಕ್ಕೂ ಅಧಿಕ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗುರುವಾರದಂದು ಮತ್ತೆ ಆರು ಮಂದಿ ಮೃತಪಟ್ಟಿದ್ದಾರೆ. ರಾಜ್ಯದ ಪ್ರಮುಖ ನದಿಗಳಾದ ಬ್ರಹ್ಮಪುತ್ರಾ, ದಿಗಾರೂ ಮತ್ತು ಕೊಲೊಂಗ್‌ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ತಿಳಿಸಿದ್ದಾರೆ. ಇದರೊಂದಿಗೆ ಈ ವರ್ಷ ಪ್ರವಾಹ, ಭೂಕುಸಿತ, ಮಳೆ ಸಂಬಂಧಿತ ಅವಘಡಗಳಲ್ಲಿ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. 29 ಜಿಲ್ಲೆಗಳಲ್ಲಿ 57,018 ಹೆಕ್ಟೇರ್ ಬೆಳೆ ಜಲಾವೃತಗೊಂಡಿವೆ. ಅಸ್ಸಾಂ ಪ್ರವಾಹ (ಪಿಟಿಐ ಚಿತ್ರ) ಧುಬ್ರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿಗೊಳಗಾಗಿದ್ದು, 6,48,806 ಮಂದಿ ತೊಂದರೆಗೆ ಸಿಲುಕಿದ್ದಾರೆ. ದರಾಂಗ್‌ನಲ್ಲಿ 1,90,261, ಕಾಚಾರ್‌ನಲ್ಲಿ 1,45,926, ಬರ್ಪೆಟಾದಲ್ಲಿ 1,31,041 ಹಾಗೂ ಗೋಲಾಘಾಟ್‌ನಲ್ಲಿ 1,08,594 ಮಂದಿ ತೊಂದರೆಗೆ ಸಿಲುಕಿದ್ದಾರೆ. ಪ್ರಸ್ತುತ 39,338 ಸಂತ್ರಸ್ತರು 698 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಮತ್ತಷ್ಟು 7,24,322 ಶಿಬಿರೇತರ ಮಂದಿಗೆ ಪರಿಹಾರ ಸಾಮಗ್ರಿ ವಿತರಿಸಲಾಗಿದೆ. ದೋಣಿ ಬಳಸಿ 1,000ಕ್ಕೂ ಹೆಚ್ಚು ಮಂದಿ ಹಾಗೂ 635 ಪ್ರಾಣಿಗಳನ್ನು ರಕ್ಷಿಸಲಾಗಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.