ನೀಟ್‌ ಅಕ್ರಮ, ಅಗ್ನಿವೀರ ಯೋಜನೆ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ ನವದೆಹಲಿ: ನೀಟ್‌–ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಅಗ್ನಿವೀರ ಯೋಜನೆಯ ವಿರುದ್ಧ ಭಾರತೀಯ ಯುವ ಕಾಂಗ್ರೆಸ್‌ (ಐವೈಸಿ) ಇಂದು (ಗುರುವಾರ) ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿತು. ಜಂತರ್‌ ಮಂತರ್‌ ಬಳಿ ಜಮಾಯಿಸಿದ್ದ ಐವೈಸಿನ ಹಲವಾರು ಕಾರ್ಯಕರ್ತರು ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನೆ ನಡೆಸಿದರು. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ 5ರಂದು ದೇಶದ 4,750 ಕೇಂದ್ರಗಳಲ್ಲಿ ನೀಟ್‌–ಯುಜಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 24 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಜೂನ್‌ 4ರಂದು ನೀಟ್ ಫಲಿತಾಂಶ ಪ್ರಕಟಗೊಂಡಿದ್ದು, 67 ವಿದ್ಯಾರ್ಥಿಗಳು 720ಕ್ಕೆ 720 ಅಂಕ ಪಡೆದಿದ್ದಾರೆ. ಇದು ಹಲವು ಅವಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಸಂಬಂಧ ಕೆಲ ರಾಜ್ಯಗಳಲ್ಲಿ ಪರೀಕ್ಷಾ ಅಕ್ರಮಗಳು ನಡೆದಿರುವ ದೂರುಗಳು ಬಂದಿವೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ. ನೀಟ್‌–ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಜೂನ್‌ 20ರಂದು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ. ಜತೆಗೆ ವಿಶೇಷ ತಂಡಗಳನ್ನು ರಚಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.