ನೀರಜ್‌ ಸಿಂಗಲ್‌ ಅರ್ಜಿ: ಇ.ಡಿಗೆ ನೋಟಿಸ್‌ ನವದೆಹಲಿ: ಸುಮಾರು ₹46,000 ಕೋಟಿ ಬ್ಯಾಂಕಿಂಗ್‌ ವಂಚನೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭೂಷಣ್‌ ಸ್ಟೀಲ್ಸ್‌ನ ಮಾಜಿ ಪ್ರವರ್ತಕ ನೀರಜ್‌ ಸಿಂಗಲ್‌ ಅವರ ಜಾಮೀನು ಅರ್ಜಿಯನ್ನು ವಿಚಾರಣೆಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ಮಂಗಳವಾರ ಸಮ್ಮತಿಸಿದೆ. ಈ ಸಂಬಂಧ ನ್ಯಾಯಮೂರ್ತಿಗಳಾದ ಮನೋಜ್‌ ಮಿಶ್ರಾ ಮತ್ತು ಎಸ್‌.ವಿ.ಎನ್‌. ಭಟ್ಟಿ ಅವರ ಪೀಠವು, ಜಾರಿ ನಿರ್ದೇಶನಾಲಯಕ್ಕೆ ನೋಟಿಸ್‌ ಜಾರಿ ಮಾಡಿದ್ದು, ಮೂರು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚಿಸಿದೆ. ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿದ್ದನ್ನು ನೀರಜ್‌ ಅವರು ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಹೈಕೋರ್ಟ್‌ ಜನವರಿ 8ರಂದು ಅವರ ಅರ್ಜಿಯನ್ನು ವಜಾಗೊಳಿಸಿತು. ಅದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ‘ನನಗೆ ಯಾವುದೇ ರೀತಿಯ ಮಾಹಿತಿ ನೀಡದೇ, ಕಾರಣ ತಿಳಿಸದೇ ಬಂಧಿಸಲಾಗಿದೆ. ಅದು ಕಾನೂನಿಗೆ ವಿರುದ್ಧ’ ಎಂದು ನೀರಜ್‌ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ. ಜಾರಿ ನಿರ್ದೇಶನಾಲಯವು ನೀರಜ್‌ ಅವರನ್ನು 2023ರ ಜೂನ್‌ 9ರಂದು ಬಂಧಿಸಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.