ರೈಲು ಪ್ರಯಾಣಿಕರಿಗೆ ಗುಣಮಟ್ಟದ ಆಹಾರ ಪೂರೈಕೆ: ಸಚಿವ ಅಶ್ವಿನಿ ವೈಷ್ಣವ್ ಸೂಚನೆ ನವದೆಹಲಿ: ರೈಲು ಪ್ರಯಾಣಿಕರಿಗೆ ಗುಣಮಟ್ಟದ ಆಹಾರವನ್ನು ಪೂರೈಸಲು ವಿಫಲವಾಗುವ ವ್ಯಾಪಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಬೇಕು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರಯಾಣಿಕರ ಕುಂದುಕೊರತೆಗಳು ಹಾಗೂ ಸುರಕ್ಷತಾ ಕ್ರಮಗಳನ್ನು ಕುರಿತಂತೆ ಸಚಿವರು ಸೋಮವಾರ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಆಹಾರದ ಗುಣಮಟ್ಟ ಉತ್ತಮಪಡಿಸಲು ಐಆರ್‌ಸಿಟಿಸಿ ಮತ್ತು ಅದರ ಏಜೆನ್ಸಿಗಳು ಸುಮಾರು ಸಾವಿರ ಸ್ಥಳಗಳಲ್ಲಿ ಅಡುಗೆ ತಯಾರಿಕೆ ತಾಣಗಳನ್ನು ಮೇಲ್ದರ್ಜೆಗೆ ಏರಿಸಬೇಕು. ಈ ಕಾರ್ಯ ಪ್ರಗತಿಯಲ್ಲಿದ್ದು, 6 ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಗಿದೆ. ರೈಲುಗಳಲ್ಲಿ ಅಡುಗೆ ಸಿದ್ಧಪಡಿಸುವ ಮತ್ತು ಆಹಾರ ಸಾಮಗ್ರಿ ದಾಸ್ತಾನು ಮಾಡುವ ಬೋಗಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಬೇಕು. ನಿಯಮಿತವಾಗಿ ಈ ಕಾರ್ಯ ನಡೆಸಲು ವೇಳಾಪಟ್ಟಿ ಸಿದ್ಧ‍‍ಪಡಿಸಬೇಕು ಎಂದು ಸೂಚಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದರು. ಸುರಕ್ಷತೆಗೆ ಒತ್ತು ನೀಡಲು, ವಿವಿಧ ಸುರಕ್ಷತಾ ಕ್ರಮಗಳ ಅಳವಡಿಕೆ, ನಿಯಮಿತ ತಪಾಸಣೆ ಕಾರ್ಯವನ್ನು ನಡೆಸಬೇಕು ಎಂದು ಸೂಚಿಸಲಾಯಿತು ಎಂದು ತಿಳಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.