ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತ: ಸಂತಾಪ ಸೂಚಿಸಿದ ರಾಷ್ಟ್ರಪತಿ ಮುರ್ಮು ನವದೆಹಲಿ: ಪಶ್ಚಿಮ ಬಂಗಾಳದ ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ್ದಾರೆ. ಈ ಸಂಬಂಧ ‘ಎಕ್ಸ್‌’ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಅಪಘಾತ ಸುದ್ದಿ ಕೇಳಿ ನನಗೆ ತೀವ್ರ ದುಃಖವಾಗಿದೆ. ಮೃತ ಕುಟುಂಬಸ್ಥರಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಗೊಂಡವರು ಶೀಘ್ರ ಚೇತರಿಕೆಗಾಗಿ ಮತ್ತು ರಕ್ಷಣಾ ಕಾರ್ಯಾಚರಣೆ ಯಶಸ್ಸಿಗಾಗಿ ಪ್ರಾರ್ಥಿಸುತ್ತೇನೆಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ ಪಶ್ಚಿಮ ಬಂಗಾಳದ ಜಲಪಾಯ್‌ಗುರಿ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲಿಗೆ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದು,ಎರಡು ಬೋಗಿಗಳು ಹಳಿತಪ್ಪಿವೆ. ಕನಿಷ್ಠ 5 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಹಿಂಬದಿಯ ಎರಡು ಬೋಗಿಗಳು ಹಳಿ ತಪ್ಪಿವೆ ಎಂದು ಕತಿಹಾರ್ ವಿಭಾಗದ ವಿಭಾಗೀಯ ರೈಲ್ವೆ ಮ್ಯಾನೇಜರ್ ಹೇಳಿದ್ದಾರೆ. 13174 ಸಂಖ್ಯೆ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಅಗರ್ತಲಾದಿಂದ ಸಿಯಾಲ್ಡಹ್‌ಗೆ ತೆರಳುತ್ತಿತ್ತು. ಬೆಳಿಗ್ಗೆ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.