ಏಕರೂಪ ನಾಗರಿಕ ಸಂಹಿತೆ ಜಾರಿ: ಸಚಿವ ಮೆಘವಾಲ್ ವಿಶ್ವಾಸ ಕೋಲ್ಕತ್ತ: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುವ ಬಗ್ಗೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೆಘವಾಲ್ ವಿಶ್ವಾಸ ವ್ಯಕ್ತಪಡಿಸಿದ್ದು, ಈಗಾಗಲೇ ಕೆಲವು ರಾಜ್ಯಗಳು ಅನುಷ್ಠಾನಕ್ಕೆ ಮುಂದಾಗಿವೆ ಎಂದು ಭಾನುವಾರ ಹೇಳಿದ್ದಾರೆ. ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ‘ಯುಸಿಸಿ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲೇ ಉಲ್ಲೇಖಿಸಿದ್ದೇವೆ. ಗೋವಾ, ಉತ್ತರಾಖಂಡ ರಾಜ್ಯಗಳು ಅನುಷ್ಠಾನಕ್ಕೆ ಮುಂದಾಗಿವೆ. ಕೇಂದ್ರದಲ್ಲಿ ಪ್ರಬಲ ಸಮ್ಮಿಶ್ರ ಸರ್ಕಾರವಿದ್ದು, ಅದರ ಬಗ್ಗೆ ಚಿಂತಿಸಬೇಕಿಲ್ಲ’ ಎಂದು ಅವರು ಹೇಳಿದರು. ಮೆಘವಾಲ್ ಅವರು ಕಳೆದ ವಾರ ಯುಸಿಸಿ ‘ಬಿಜೆಪಿಯ ಅಜೆಂಡಾ’ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಜೆಡಿಯು ಮುಖಂಡ ಕೆ.ಸಿ. ತ್ಯಾಗಿ, ‘ಏಕರೂಪ ನಾಗರಿಕ ಸಂಹಿತೆಗೆ ನಮ್ಮ ವಿರೋಧವಿಲ್ಲ. ಆದರೆ ಒಮ್ಮತದಿಂದ ಅನುಷ್ಠಾನಗೊಳ್ಳಬೇಕು’ ಎಂದು ಹೇಳಿದ್ದರು. ಚುನಾವಣೋತ್ತರ ಹಿಂಸಾಚಾರ–ಟೀಕೆ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರವನ್ನು ಕೇಂದ್ರ ಕಾನೂನು ಸಚಿವರು ಟೀಕಿಸಿದ್ದು, ಕೇಂದ್ರ ಸರ್ಕಾರವು ಈ ಬಗ್ಗೆ ಎಚ್ಚರ ವಹಿಸಿದೆ ಎಂದಿದ್ದಾರೆ. ‘ಪ್ರಜಾಪ್ರಭುತ್ವದಲ್ಲಿ ಚುನಾವಣೆಯು ಮಹತ್ವದ ಭಾಗ. ಭಾರತದಂತಹ ಪ್ರಜಾಪ್ರಭುತ್ವ ದೇಶಕ್ಕೆ ಚುನಾವಣೋತ್ತರ ಹಿಂಸಾಚಾರ ಆರೋಗ್ಯಕರವಲ್ಲ. ಚುನಾವಣೆ ಮುಗಿದ ನಂತರ ಯಾವುದೇ ಹಿಂಸಾಚಾರ ನಡೆಯಬಾರದು ಎಂದು ತಿಳಿಸಿದ್ದಾರೆ. ಸಮಿತಿ ರಚನೆ: ಪಶ್ಚಿಮ ಬಂಗಾಳದಲ್ಲಿ ನಡೆದ ರಾಜಕೀಯ ಹಿಂಸಾಚಾರದ ಬಗ್ಗೆ ಪರಿಶೀಲಿಸಲು ಬಿಜೆಪಿಯು ಶನಿವಾರ ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದ್ದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೂಕಪ್ರೇಕಕರಾಗಿದ್ದಾರೆ ಎಂದು ಆರೋಪಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.