ವಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ಗಾಂಧಿಯಿಂದ ಅವಮಾನ: ಬಿಜೆಪಿ ನವದೆಹಲಿ: ತಮ್ಮ ಬೇಜವಾಬ್ದಾರಿಯುತ ಭಾಷಣದ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕನ ಸ್ಥಾನಕ್ಕೆ ಅವಮಾನ ಮಾಡಿದ್ದಾರೆ ಎಂದು ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ಕಿರಣ್‌ ರಿಜಿಜು ಹೇಳಿದ್ದಾರೆ. ಹಿಂದು ಸಮಾಜದವರು ಹಿಂಸಾಪ್ರವೃತ್ತಿಯರು ಎನ್ನುವ ಮೂಲಕ ರಾಹುಲ್‌ ಗಾಂಧಿ, ಹಿಂದುಗಳಿಗೆ ಘೋರ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಮಾಡಿದ ಭಾಷಣದಲ್ಲಿ ರಾಹುಲ್ ಗಾಂಧಿ ಅವರು ಹೇಳಿದ ಅನೇಕ ವಿಷಯಗಳ ಬಗ್ಗೆ ಬಿಜೆಪಿ ಪ್ರಶ್ನೆ ಎತ್ತಿದ್ದು, ಕ್ರಮ ತೆಗೆದುಕೊಳ್ಳುವಂತೆ ಸ್ಪೀಕರ್ ಅವರಿಗೆ ಮನವಿ ಮಾಡಲಾಗಿದೆ ಎಂದರು. ಅಗ್ನಿಪಥ್ ಯೋಜನೆ ಮತ್ತು ಅಯೋಧ್ಯೆ ನಿವಾಸಿಗಳಿಗೆ ಪರಿಹಾರದ ಕುರಿತಾಗಿ ರಾಹುಲ್‌ ಗಾಂಧಿ ಮಾಡಿದ ಆರೋಪಗಳಿಗೆ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಅಯೋಧ್ಯೆ ಅಭಿವೃದ್ದಿ ಯೋಜನೆ ಸಂದರ್ಭ ಸ್ಥಳೀಯ ವ್ಯಾಪಾರಿಗಳು ಮತ್ತು ಇತರರಿಗೆ ₹1,253 ಕೋಟಿಗೂ ಹೆಚ್ಚು ಪರಿಹಾರವನ್ನು ನೀಡಲಾಗಿದೆ. ಅಲ್ಲದೇ ಸ್ಥಳಾಂತರದ ವೇಳೆಯೂ ಸಹಾಯ ಮಾಡಲಾಗಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.