ಕೇರಳದಲ್ಲಿ ಭಾರಿ ಮಳೆ, ಬಿರುಗಾಳಿಯ ಮುನ್ಸೂಚನೆ ತಿರುವನಂತಪುರಂ: ಕೇರಳದಲ್ಲಿ ನೈರುತ್ಯ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕೇರಳ ರಾಜ್ಯದಾದ್ಯಂತ ವಿವಿಧ ಸ್ಥಳಗಳಲ್ಲಿ ಭಾರಿ ಮಳೆ ಮತ್ತು ಬಿರುಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಇತ್ತೀಚಿನ ಐಎಂಡಿ ಅಪ್‌ಡೇಟ್ ಪ್ರಕಾರ, ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಗಂಟೆಗೆ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹೇಳಿದೆ. ತಿರುವನಂತಪುರಂನ ಅರುವಿಕ್ಕರ ಆಣೆಕಟ್ಟಿನ ಶಟರ್‌ಗಳನ್ನು ಶನಿವಾರ ಬೆಳಿಗ್ಗೆ 25 ಸಿ.ಎಂ.ಗಳಷ್ಟು ಮೇಲಕ್ಕೆ ಎತ್ತಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ಗಂಟೆಗಳಲ್ಲಿ ಶಟರ್‌ಗಳನ್ನು ಮತ್ತಷ್ಟು ಮೇಲಕ್ಕೆತ್ತಿ, ಹೆಚ್ಚು ನೀರನ್ನು ಹರಿಸಲಾಗುವುದು. ಈ ಪ್ರದೇಶದಲ್ಲಿ ವಾಸಿಸುವವರು ಎಚ್ಚರಿಕೆ ವಹಿಸಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ. ಆಂಧ್ರದ ಕೆಲವೆಡೆ ಗುಡುಗು ಸಹಿತ ಮಳೆ ಸೂಚನೆ: ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಹಾಗೂ ರಾಯಲಸೀಮಾ ಪ್ರದೇಶದಲ್ಲಿ ಶನಿವಾರದಿಂದ ಜೂನ್‌ 12ರ ವರೆಗೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆಯವರ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.